More

    ಪೂರಿಗಾಲಿ ಯೋಜನೆ ಉದ್ಘಾಟನೆಗೆ ತರಾತುರಿ: ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅಸಮಾಧಾನ

    ಮಂಡ್ಯ: ಮಳವಳ್ಳಿ ತಾಲೂಕು ಪೂರಿಗಾಲಿಯಲ್ಲಿ 593 ಕೋಟಿ ರೂ ವೆಚ್ಚದ ಹನಿ ನೀರಾವರಿ ಯೋಜನೆ ಪೂರ್ಣಗೊಳ್ಳದಿದ್ದರೂ ತರಾತುರಿಯಲ್ಲಿ ಉದ್ಘಾಟಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನಲಾಗುತ್ತಿದೆ. ಒಂದು ವೇಳೆ ಲೋಕಾರ್ಪಣೆ ಮಾಡಿದರೆ ರೈತರಿಗೆ ಅನ್ಯಾಯವಾಗಲಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
    ಹನಿ ನೀರಾವರಿಯ ಪೈಪ್‌ಲೈನ್ ಕಾಮಗಾರಿ ಪೂರ್ಣವಾಗಿಲ್ಲ. ಯಂತ್ರಗಳ ಪ್ರಾಯೋಗಿಕ ಪರೀಕ್ಷೆ ಮಾಡಲು ಕನಿಷ್ಠ ಒಂದು ತಿಂಗಳ ಅವಧಿ ಬೇಕು. ವಿದ್ಯುಚ್ಛಕ್ತಿ ಯಾವ ಹಂತದಲ್ಲಿದೆ, ಎಲ್ಲೆಲ್ಲಿ ನೀರು ಸೋರಿಕೆಯಾಗುತ್ತಿದೆಂಬ ಬಗ್ಗೆ ಮಾಹಿತಿ ಇಲ್ಲ. ಈ ಕಾಮಗಾರಿ ಜೂನ್ ಅಂತ್ಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೇ ಲಿಖಿತವಾಗಿ ಉತ್ತರ ನೀಡಿದ್ದಾರೆ. ಉದ್ಘಾಟನೆ ಎಂದರೆ ಕಾಮಗಾರಿ ಪೂರ್ಣ ಎಂದರ್ಥ. ಹಾಗಾಗಿ ಗುತ್ತಿಗೆದಾರ ಸಂಪೂರ್ಣ ಬಿಲ್ಲನ್ನು ಪಡೆದು ತೆರಳುತ್ತಾನೆ. ಇದರಿಂದ ಯೋಜನೆ ಪೂರ್ಣಗೊಳ್ಳದೆ ರೈತನಿಗೆ ಅನ್ಯಾಯವಾಗುತ್ತದೆ ಎಂದು ಶಾಸಕ ಡಾ.ಕೆ.ಅನ್ನದಾನಿ ವಿರುದ್ಧ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
    ಹನಿ ನೀರಾವರಿ ಯೋಜನೆ ಉದ್ಘಾಟನೆ ಸಂಬಂಧ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಜತೆ ಮಾತನಾಡಲಾಗಿದೆ. ಸರ್ಕಾರದಿಂದ ಆದೇಶ ಬಂದರೆ ನಾವು ಉದ್ಘಾಟನೆಗೆ ಸಿದ್ಧತೆ ಮಾಡಿ ಕೊಳ್ಳಬೇಕಾಗುತ್ತದೆ. ಮೇಲಿನಿಂದ ಒತ್ತಡ ಬಂದರೆ ಅಂದರೆ ಏನರ್ಥ. ಇದು ಶಾಸಕರು ಹಾಗೂ ಬಿಜೆಪಿ ಸರ್ಕಾರದ ಒಳ ಒಪ್ಪಂದವನ್ನು ಸೂಚಿಸುತ್ತದೆ ಎಂದು ಆರೋಪಿಸಿದ ಅವರು, ಹನಿ ನೀರಾವರಿ ಯೋಜನೆ ಹತ್ತು-ಇಪ್ಪತ್ತು ಕೋಟಿ ರೂ ಕಾಮಗಾರಿಯಲ್ಲ. ಸುಮಾರು 25 ಸಾವಿರ ಎಕರೆಗೆ ನೀರೊದಗಿಸುವ ಕಾಮಗಾರಿ ಪೂರ್ಣಗೊಳ್ಳದೆ ಲೋಕಾರ್ಪಣೆ ಮಾಡಿದರೆ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಸಂಪೂರ್ಣ ಕಾಮಗಾರಿ ಮುಗಿಸಿ ರೈತರಿಗೆ ನೀಡಿದರೆ ಅನುಕೂಲ ಎಂದು ತಿಳಿಸಿದರು.
    ಯತ್ತಂಬಾಡಿ ಮುರಾರ್ಜಿ ದೇಸಾಯಿ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಪೋಲಿಸರು ನಮ್ಮ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಬಂಧಿಸಿದ ಸಂದರ್ಭದಲ್ಲಿ ನಾನು ಮಾಡಿದ ಪದಬಳಕೆ ಸರಿಯಾಗಿರಲಿಲ್ಲ. ಜತೆಗೆ ನಾನು ಯಾವುದೇ ಪಕ್ಷದ ವಿರುದ್ಧ ಪದಬಳಕೆ ಮಾಡಲಿಲ್ಲ. ಒತ್ತಡದ ಸಂದರ್ಭದಲ್ಲಿ ಅಸಂಬದ್ಧ ಪದಬಳಕೆ ಮಾಡಿದ್ದೆ. ಇದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದೇನೆ ಎಂದ ಅವರು, ಜಿಲ್ಲೆಯಲ್ಲಿ ಸಾಕಷ್ಟು ಅಪೂರ್ಣ ಕಾಮಗಾರಿಗಳ ಉದ್ಘಾಟನೆ ತರಾತುರಿಯಲ್ಲಿ ನಡೆಯುತ್ತಿದೆ. ಇನ್ನು 8ರಿಂದ 10 ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಶೇ.30 ರಿಂದ 40ರಷ್ಟು ಕೆಲಸ ಬಾಕಿ ಇದ್ದರೂ ಕಾಮಗಾರಿಗಳನ್ನು ತರಾತುರಿಯಲ್ಲಿ ಉದ್ಘಾಟನೆ ಮಾಡಲಾಗುತ್ತಿದೆ. ಮೂಲ ಸೌಕರ್ಯಗಳನ್ನು ಪೂರ್ಣಗೊಳಿಸದೆ ಅಪೂರ್ಣ ಕಾಮಗಾರಿಯನ್ನು ಉದ್ಘಾಟನೆ ಮಾಡುತ್ತಿದ್ದರೂ, ಹಾಲಿ ಶಾಸಕರ ಜತೆ ಜಿಲ್ಲಾಡಳಿತ ಕೈಜೋಡಿಸಿದೆ ಎಂಬ ಅನುಮಾನ ಮೂಡಿದೆ ಎಂದು ಆರೋಪಿಸಿದರು.
    ಎಂಎಲ್‌ಸಿ ದಿನೇಶ್ ಗೂಳಿಗೌಡ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ದಶಪಥ ರಸ್ತೆ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯರಾದ ನನಗೆ ಮತ್ತು ಮಧು ಮಾದೇಗೌಡರಿಗೆ ಜಿಲ್ಲಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆಹ್ವಾನ ನೀಡಿಲ್ಲದಿರುವುದು ಶಿಷ್ಟಾಚಾರದ ಉಲ್ಲಂಘನೆಯಾಗಿದ್ದು ಶಾಸಕರ ಹಕ್ಕು ಚ್ಯುತಿಯಾಗಿದೆ. ಆದ್ದರಿಂದ ಉಪಸಭಾಪತಿ ಅವರ ಮುಂದೆ ಹಕ್ಕು ಚ್ಯುತಿ ಮಂಡನೆ ಮಾಡಿದ್ದೇವೆ ಎಂದರು.
    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಜನಾ ಶ್ರೀಕಾಂತ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್, ತಾ.ಪಂ ಮಾಜಿ ಅಧ್ಯಕ್ಷ ನಾಗೇಶ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಜಾಹಿದ್ ಉಪಸ್ಥಿತರಿದ್ದರು.
    ಡಿಸಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ: ಮಳವಳ್ಳಿ ಸೇರಿದಂತೆ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಅಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಮಾಡುತ್ತಿರುವುದು ಕಂಡುಬಂದಿದೆ. ಅಲ್ಲದೆ ಟೆಂಡರ್ ಆಗುವುದಕ್ಕೂ ಮುನ್ನ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ಸಹ ಗಮನಕ್ಕೆ ಬಂದಿದೆ. ಆದ್ದರಿಂದ ಇಂತಹ ಕೆಲಸಕ್ಕೆ ಅವಕಾಶ ಮಾಡಿಕೊಡಬಾರೆಂದು ಶನಿವಾರ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರಿಗೆ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಲಾಯಿತು.
    ಡಿಸಿ ಕಚೇರಿಗೆ ತೆರಳಿದ ಎಂಎಲ್‌ಸಿಗಳಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ ಮತ್ತು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ, ಚುನಾವಣಾ ನೀತಿ ಸಂಹಿತೆ ಜಾರಿಯಾಗಲು ಇನ್ನೂ ಒಂದು ವಾರ ಅಷ್ಟೇ ಬಾಕಿ ಇದೆ. ಜಿಲ್ಲೆಯಲ್ಲಿ ಇನ್ನೂ ಪೂರ್ಣವಾಗದೇ ಇರುವ ಕಾಮಗಾರಿಗಳನ್ನು ಉದ್ಘಾಟಿಸುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲಾಗುತ್ತಿದೆ. ಚುನಾವಣಾ ಆಯೋಗದ ನಿರ್ದೇಶನವನ್ನು ಧಿಕ್ಕರಿಸಲಾಗುತ್ತಿದೆ. ಇದು ಬಹುತೇಕ ಎಲ್ಲ ಇಲಾಖೆಗಳಲ್ಲಿಯೂ ನಡೆಯುತ್ತಿದೆ ಎಂಬ ದೂರುಗಳು ಈಗಾಗಲೇ ಕೇಳಿ ಬರುತ್ತಿವೆ. ಇದು ಚುನಾವಣಾ ಆಯೋಗದ ಸೂಚನೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಆದ್ದರಿಂದ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಕಾರ್ಯಗಳೂ ನಡೆಯದಂತೆ ನೋಡಿಕೊಳ್ಳುವ ಮೂಲಕ ನಿಷ್ಪಕ್ಷಪಾತ ಚುನಾವಣೆ ನಡೆಸಲು ಹಾಗೂ ಚುನಾವಣಾ ಆಯೋಗದ ನಿರ್ದೇಶನವನ್ನು ಪಾಲಿಸುವಂತೆ ಒತ್ತಾಯಿಸಲಾಯಿತು.
    ಇನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ಕುಮಾರ್ ಅವರು ಮತದಾರರಿಗೆ ಆಮಿಷವೊಡ್ಡುವುದನ್ನು ತಡೆಯಲು ನೀತಿ ಸಂಹಿತೆ ಜಾರಿಯಾಗುವವರೆಗೂ ಕಾಯದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜತೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ಕುಮಾರ ಮೀನಾ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಮಾ.8 ರಂದು ಪತ್ರ ಬರೆದು, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಮಾಡಬೇಕಾದಲ್ಲಿ ಆಯೋಗದ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಿರುತ್ತಾರೆ. ಆದರೂ ಆಯೋಗದ ಆದೇಶ ಮೀರಿ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಇತ್ತ ಜಿಲ್ಲೆಯಲ್ಲಿ ಚುನಾವಣಾ ಆಯೋಗದ ಸೂಚನೆಗಳನ್ನು ಮೀರಿ ಮತದಾರರಿಗೆ ಆಮಿಷವೊಡ್ಡುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಈ ಬಗ್ಗೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.
    ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಈಗಾಗಲೇ ಜಿಲ್ಲಾದ್ಯಂತ ಕ್ರಮವಹಿಸಲಾಗಿದೆ. ಎಲ್ಲ ತಾಲೂಕುಗಳಿಗೂ ಸೂಚನೆ ನೀಡಲಾಗಿದ್ದು, ಅಪೂರ್ಣ ಕಾಮಗಾರಿಗಳನ್ನು ಉದ್ಘಾಟನೆ ಮಾಡಬಾರದು ಹಾಗೂ ಟೆಂಡರ್ ಆಗದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಬಾರದೆಂದು ಹೇಳಲಾಗಿದೆ ಎಂದಿದ್ದಾರೆ.
    ಬಳಿಕ ಜಿಲ್ಲಾ ಪಂಚಾಯತಿ ಸಿಇಒ ಶಾಂತಾ ಎಲ್.ಹುಲ್ಮನಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೂ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts