More

    ಬಡತನ ನಿರ್ಮೂಲನೆಗೆ ಯೋಜನೆ ಸಿದ್ಧಪಡಿಸಿ

    ಗದಗ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಜನರ ಸಹಭಾಗಿತ್ವ ಹಾಗೂ ಅಭಿವೃದ್ಧಿ ಪರ ಚಿಂತನೆಗಳ ಕುರಿತು ತಳ ಹಂತದಿಂದಲೇ ವಿಕೇಂದ್ರೀಕೃತ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.

    ನಗರದ ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಭಾಭವನದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕರಡು ಯೋಜನೆ ಕುರಿತ ಚರ್ಚೆಯಲ್ಲಿ ಅವರು ಮಾತನಾಡಿದರು.

    ‘ಸುಸ್ಥಿರ ಗ್ರಾಮೀಣ ಅಭಿವೃದ್ಧಿ ಗುರಿಗಳನ್ನು ಗಮನದಲ್ಲಿ ಇಟ್ಟುಕೊಂಡು ಗ್ರಾಮೀಣ ಪ್ರದೇಶಗಳ ಜನರ ಜೀವನೋಪಾಯ, ಕೌಶಲಾಭಿವೃದ್ಧಿ ಹಾಗೂ ಬಡತನ ನಿಮೂಲನೆಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಸ್ಥಳೀಯ ಪ್ರಾಕೃತಿಕ, ಮಾನವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಪ್ರತಿ ಯೋಜನೆಗಳ ಅನುಷ್ಠಾನದಲ್ಲಿ ಸ್ಥಳೀಯ ಜನರನ್ನು ತೊಡಗಿಸಿ ಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಉಪಾಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ಜನರ ಸಹಭಾಗಿತ್ವ ಬಹುಮುಖ್ಯ. ಜನರ ಆಶಯದಂತೆ ಗ್ರಾಮ ಪಂಚಾಯಿತಿಯಿಂದಲೇ ಕ್ರಿಯಾ ಯೋಜನೆಗಳು ತಯಾರಾಗಬೇಕು ಎಂದರು.

    ಪರಿಷತ್ ಕಾರ್ಯಾಧ್ಯಕ್ಷ ಸಿ. ನಾರಾಯಣಸ್ವಾಮಿ ಮಾತನಾಡಿ, ಸಭೆಗಳು ಕೇವಲ ಚರ್ಚೆಗೆ ಸೀಮಿತವಾಗದೆ, ರ್ಚಚಿತ ವಿಷಯಗಳು ಕಾರ್ಯರೂಪಕ್ಕೆ ಬರಬೇಕು. ಇಂತಹ ಸಭೆಗಳಲ್ಲಿ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಿ ಕೊಡಬೇಕು. ವಾರ್ಡ್ ಮತ್ತು ಗ್ರಾಮಸಭೆಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ಕಡ್ಡಾಯವಾಗಿ ನಡೆಸಬೇಕು ಎಂದು ಸೂಚಿಸಿದರು.

    ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಸ್ಥಳೀಯ ಸಮಸ್ಯೆಗಳನ್ನು ಸರಿದೂಗಿಸಲು ಹೆಚ್ಚು ಆದ್ಯತೆ ನೀಡಬೇಕು. ಜನತೆಯ ಅವಶ್ಯಕತೆಗಳಿಗೆ ಅನುಗುಣವಾಗಿ ಯೋಜನೆ ಸಿದ್ಧಪಡಿಬೇಕು ಎಂದರು. ಹಿರಿಯ ಅಧಿಕಾರಿ ಗಣೇಶ ಪ್ರಸಾದ ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದ ಜತೆಗೆ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಗಮನದಲ್ಲಿಟ್ಟುಕೊಂಡು 2020ರಿಂದ 2030ರವರೆಗಿನ ಜಿಲ್ಲೆಯ ಅಭಿವೃದ್ಧಿಯ ಮುನ್ನೋಟ ತಯಾರಿಸಲಾಗಿದೆ. ಅಲ್ಲದೆ, ಸಮುದಾಯ ಸಹಭಾಗಿತ್ವದೊಂದಿಗೆ ಯೋಜನೆ ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಮಟ್ಟದಲ್ಲಿ ಕೋರ್ ಕಮಿಟಿ ಹಾಗೂ 11 ಕಾರ್ಯ ತಂಡಗಳನ್ನು ರಚಿಸಲಾಗಿದೆ. ಕಾರ್ಯತಂಡಗಳಿಗೆ ಆಗಸ್ಟ್ ನಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಶಾಸಕ ರಾಮಣ್ಣ ಲಮಾಣಿ, ಜಿ.ಪಂ. ಉಪಾಧ್ಯಕ್ಷೆ ಶೋಭಾ ಮೇಟಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಸಿಇಒ ಡಾ. ಆನಂದ್ ಕೆ, ಜಿ.ಪಂ. ಉಪ ಕಾರ್ಯದರ್ಶಿ ಕಲ್ಲೇಶ ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಎಲ್ಲ ಜಿಲ್ಲೆಗೂ ವಿಸ್ತರಣೆ: ಸದ್ಯ ರಾಜ್ಯದ ಕೆಲ ಜಿಲ್ಲೆಯಲ್ಲಿ ಮಾತ್ರ ವಿಕೇಂದ್ರೀಕರಣ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲೂ ಪ್ರಾರಂಭಿಸಲಾಗುವುದು. ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯಲ್ಲೂ ವಾರ್ಡ್ ಸಭೆ ನಡೆಸಲು ಕ್ರಮ ಕೈಗೊಳ್ಳಲಾಗುವುದು. ಕರೊನಾದಿಂದ ಅಭಿವೃದ್ಧಿ ಕಾರ್ಯಕ್ಕೆ ತಡೆಯಾಗಿದ್ದರೂ ಕೋವಿಡ್- ನಿಯಂತ್ರಣಕ್ಕಾಗಿ ಗ್ರಾಪಂ ವ್ಯಾಪ್ತಿಯ ಕಾರ್ಯಪಡೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅತೀಕ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts