More

    ಪತ್ರಿಕಾ ಧರ್ಮದ ಆತ್ಮಾವಲೋಕನ ಅವಶ್ಯ: ಸಿದ್ದರಾಮಯ್ಯ

    ಬೆಂಗಳೂರು: ಪತ್ರಿಕೆಗಳು ಧ್ವನಿ ಇಲ್ಲದವರಿಗೆ ಧ್ವನಿಯಾಗಿರಬೇಕು. ಸಾಮಾಜಿಕ ನ್ಯಾಯ ವಂಚಿತರ ಪರ ನಿಲ್ಲಬೇಕು. ಪತ್ರಕರ್ತರು ಪತ್ರಿಕಾ ಧರ್ಮ ಅನುಸರಣೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
    ಪ್ರೆಸ್ ಕ್ಲಬ್ ಆ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

    ಪತ್ರಕರ್ತರು ಅತ್ಮಾವಲೋಕನ ಮಾಡಿಕೊಳ್ಳದೇ ಹೋದರೆ ಸಮಾಜ ಸರಿ ಮಾಡಲು ಆಗುವುದಿಲ್ಲ. ಸಾಮಾಜಿಕ ಸಂವೇದನೆ, ಸಾಮಾಜಿಕ ಬದ್ಧತೆ ಇಲ್ಲದೇ ಹೋದರೆ ಸಾಮಾಜಿಕ ನ್ಯಾಯ ಕೊಡಲು ಆಗುವುದಿಲ್ಲ ಎಂದರು.
    ಸಾಮಾಜಿಕ ಜವಾಬ್ದಾರಿ ಪತ್ರಕರ್ತರಿಗೆ ಮಾತ್ರವಲ್ಲ ಸಾರ್ವಜನಿಕ ಕ್ಷೇತ್ರದಲ್ಲಿರುವ ಎಲ್ಲರಲ್ಲೂ ಇದ್ದರೆ ಜನಪರ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

    ಸುಳ್ಳು ಸುದ್ದಿ ಬರೆಯಬಾರದು:

    ಸುಳ್ಳು ಸುದ್ದಿ ಬರೆಯಬಾರದು. ಮೊದಲು ಪತ್ರಿಕೆ ಮೂಲಕ ಸತ್ಯ ಹುಡುಕುತ್ತಿದ್ದರು. ಇವತ್ತು ಆ ಪರಿಸ್ಥಿತಿ ಇದೆಯಾ? ಪತ್ರಿಕೆಗಳಿಂದ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಸಂಪೂರ್ಣ ಇಲ್ಲ. ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದು ಹೇಳಿದರು.
    ಸಾಮಾಜಿಕ ಅಸಮಾನತೆ ಹಿಂದಿನಿಂದ ನಡೆದುಕೊಂಡು ಬಂದಿದೆ. ಹೀಗಾಗಿ ಸಮಾಜದ ಬಹುಪಾಲು ಮಂದಿ ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯಕ್ಕೆ ಬಲಿಯಾಗಿದ್ದಾರೆ. ಇದಕ್ಕಾಗಿಯೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಅನುಷ್ಠಾನಗೊಳ್ಳುವ ಹಿಂದಿನ ದಿನ ತಾವು ಮಾಡಿದ ಐತಿಹಾಸಿಕ ಭಾಷಣದಲ್ಲಿ ಆರ್ಥಿಕ-ಸಾಮಾಜಿಕ ಸ್ವಾತಂತ್ರ್ಯ ಸಿಗದೆ ಕೇವಲ ದೇಶಕ್ಕೆ ಆಡಳಿತಾತ್ಮಕ, ರಾಜಕೀಯ ಸ್ವಾತಂತ್ರ್ಯ ಸಿಕ್ಕರೆ ಅಸಮಾನತೆಗೆ ಬಲಿಯಾದ ಜನ ಮುಂದೊಂದು ದಿನ ಈ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡಿಬಿಡಬಹುದು ಎಂದು ಎಚ್ಚರಿಸಿದ್ದಾರೆ ಎಂದರು.

    ನನ್ನ ಪ್ರಯತ್ನ ಧ್ವನಿ ಇಲ್ಲದವರ ಪರ:

    ದುಡಿಯುವ ವರ್ಗಗಳು ಹಸಿವಿನಿಂದ ಮಲಗಿದರೂ ಪರವಾಗಿಲ್ಲ. ಅನ್ನಭಾಗ್ಯ ಮಾತ್ರ ಜಾರಿ ಮಾಡಬಾರದು ಎನ್ನುವ ಹೊಟ್ಟೆ ತುಂಬಿದವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಸಮಾಜದಲ್ಲಿ ಅವಕಾಶ ವಂಚಿತರು ಮತ್ತು ಧ್ವನಿ ಇಲ್ಲದವರನ್ನು ಮುಖ್ಯವಾಹಿನಿಗೆ ತರುವ ನನ್ನ ಪ್ರಯತ್ನ ನಿರಂತರ ಎಂದು ತಿಳಿಸಿದರು.
    ಸಮಾಜದಲ್ಲಿ ಇನ್ನೂ ಶೇ.25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದ್ದೇನೆ ಎಂದು ಹೇಳಿದರು.

    ಬಿಜೆಪಿಯವರ ಮನಸ್ಥಿತಿ ಜನವಿರೋಧಿ:

    ಜನರ ಜೇಬಿನಲ್ಲಿ ಹಣ ಇದ್ದರೆ ಮಾತ್ರ ದೇಶದ ಆರ್ಥಿಕತೆ ಬೆಳವಣಿಗೆ ಕಾಣುತ್ತದೆ. ಈ ಕಾರಣಕ್ಕೇ ನಮ್ಮ ಸರ್ಕಾರ ದುಡಿಯುವ ಜನರ ಜೇಬಿನಲ್ಲಿ ಹಣ ಇರುವ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯವರ ಮನಸ್ಥಿತಿ ಸಮಾಜ ವಿರೋಧಿಯಾದದ್ದು. ಹೀಗಾಗಿ ಪತ್ರಿಕಾ ವೃತ್ತಿಯಲ್ಲಿರುವವರು ಬಡವರ ಪರ, ಜನರ ಪರವಾದ ಯೋಜನೆಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಪತ್ರಿಕೋದ್ಯಮದಿಂದ ಪ್ರಜಾಪ್ರಭುತ್ವ ರಕ್ಷಣೆ:

    ಪತ್ರಕರ್ತರ ಸಾಮಾಜಿಕ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತೆ ಡಾ.ಆರ್.ಪೂರ್ಣಿಮಾ, ಸಾಮಾಜಿಕ ಜವಾಬ್ದಾರಿಯ ತಂತ್ರಾಂಶ ಪತ್ರಕರ್ತರ ಮನಸ್ಸಿನಲ್ಲೇ ಇರಲೇಬೇಕು. ಆಗ ಪತ್ರಿಕೋದ್ಯಮದ ಸಾಮಾಜಿಕ ಜವಾಬ್ದಾರಿ ಇನ್ನೂ ಹೆಚ್ಚುತ್ತದೆ ಎಂದು ಹೇಳಿದರು.
    ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವ, ಆತ್ಮಾವಲೋಕನ ಮಾಡಿಕೊಳ್ಳುವ, ಸಾಮಾಜಿಕ ಜವಾಬ್ದಾರಿ ನೆನಪಿಸುವ ಕಾಲ ಇದಾಗಿದೆ. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಬಹು ದೊಡ್ಡ ಅಸ್ತ್ರ ಎಂದು ತಿಳಿಸಿದರು.

    ಹಿರಿಯ ಪತ್ರಕರ್ತ ಪಿ.ರಾಮಯ್ಯ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿರಿಯ ಪತ್ರಕರ್ತ ಡಿ.ಉಮಾಪತಿ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕರಾದ ರವಿ ಹೆಗಡೆ, ವಾರ್ತಾ ಇಲಾಖೆ ಆಯುಕ್ತ ಡಾ.ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ 10ಮಂದಿ ಹಿರಿಯ ಪತ್ರಕರ್ತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts