ಮಂಡ್ಯ: ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರಸ್ವಾಮೀಜಿ ಅವರ 116ನೇ ಜನ್ಮದಿನಾಚರಣೆ, ಮಹಾದಾಸೋಹ ಹಾಗೂ ಕಾಯಕಯೋಗಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದಲ್ಲಿ ಏ.1ರಂದು ಆಯೋಜಿಸಲಾಗಿದೆ ಎಂದು ಸಿದ್ದಗಂಗಾ ಮಠದ ಹಳೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳ ಸಂಘದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ತಿಳಿಸಿದರು.
ಸ್ವರ್ಣಸಂದ್ರ ಬಡಾವಣೆಯ ಡಾ.ಶಿವಕುಮಾರಸ್ವಾಮೀಜಿ ಉದ್ಯಾನದಲ್ಲಿ ಅಂದು ಬೆಳಗ್ಗೆ 9ರಿಂದ ದಾಸೋಹ ಆರಂಭಗೊಳ್ಳಲಿದೆ. ಬಳಿಕ ನಗರಸಭೆ ಸದಸ್ಯೆ ಕೆ.ವಿದ್ಯಾ ಮಂಜುನಾಥ್ ಅಧ್ಯಕ್ಷತೆಯಲ್ಲಿ ವೇದಿಕೆ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಯಕಯೋಗಿ ಫೌಂಡೇಷನ್, ಸಿದ್ದಗಂಗಾ ಸೇವಾ ಸಮಿತಿ ಸಹಯೋಗದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಉದ್ಯಾನದ ಸ್ವಚ್ಛತೆಯ ಜತೆಗೆ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ಇದೇ ವೇಳೆ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು. ಶಾಸಕ ಎಂ.ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪುಟ್ಟಸ್ವಾಮಿ ಭಾಗವಹಿಸುವರು ಎಂದರು.
ಸಿದ್ದಗಂಗಾ ಸೇವಾ ಸಮಿತಿ ಅಧ್ಯಕ್ಷ ಎಂ.ಆರ್.ಮಂಜುನಾಥ್, ರಾಜ್ಯ ವೀರಶೈವ ಲಿಂಗಾಯತ ವಿದ್ಯಾರ್ಥಿ ಯುವಮೋರ್ಚಾ ಅಧ್ಯಕ್ಷ ಬಿ.ಟಿ.ಜೀವನ್, ಹಿರಿಯ ಸಲಹೆಗಾರ ಎಚ್.ಸಿ.ಮಂಜುನಾಥ್, ಜಿಲ್ಲಾ ನಿರ್ದೇಶಕ ಚೇತನ್, ವಿಶ್ವನಾಥ್, ಮಹೇಶ್, ಸುರೇಶ್, ಮಲ್ಲಿಕಾರ್ಜುನ್ ಇದ್ದರು.