More

    ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಕಡ್ಡಾಯ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

    ಮಂಗಳೂರು: ಕರೊನಾ ಚಿಕಿತ್ಸೆ ನೀಡುತ್ತಿರುವ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಮಾಡದೆ ಹೆಚ್ಚುವರಿ ಬಿಲ್ ನೀಡಿರುವ ಕುರಿತು ಜನರಿಂದ ದೂರು ಬಂದು ಅದರಲ್ಲಿ ಸತ್ಯಾಂಶವಿದ್ದರೆ ಅಂತಹ ಆಸ್ಪತ್ರೆಗಳ ವಿರುದ್ಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.
    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬುಧವಾರ ‘ಕೋವಿಡ್-19, ಆಯುಷ್ಮಾನ್ ಭಾರತ್’ ಯೋಜನೆ ಕುರಿತ ವಿಶೇಷ ಜನಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಜಿಲ್ಲೆಯಲ್ಲಿ 8 ವೈದ್ಯಕೀಯ ಕಾಲೇಜುಗಳ ಸಹಿತ 92 ಖಾಸಗಿ ಆಸ್ಪತ್ರೆಗಳಿದ್ದು, ಇವುಗಳಲ್ಲಿ 12 ಖಾಸಗಿ ಆಸ್ಪತ್ರೆಗಳು ಈಗಾಗಲೇ ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ನೀಡುತ್ತಿವೆ. ಹೆಚ್ಚುವರಿ 12 ಆಸ್ಪತ್ರೆಗಳು ನೋಂದಣಿ ಹಂತದಲ್ಲಿದ್ದು, ಶೀಘ್ರ ಅನುಮತಿ ಪಡೆಯಲಿವೆ. ಉಳಿದ ಆಸ್ಪತ್ರೆಗಳೂ ನೋಂದಣಿ ಮಾಡಿಸಿಕೊಳ್ಳುವ ಮೂಲಕ ಎಲ್ಲರಿಗೂ ಕರೊನಾ ಚಿಕಿತ್ಸೆ ಉಚಿತವಾಗಿ ಸಿಗುವಂತಾಗಬೇಕು ಎಂದರು.

    ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್, ಪಾಲಿಕೆ ಜಂಟಿ ಆಯುಕ್ತ ಸಂತೋಷ್ ಕುಮಾರ್, ಡಿಸಿಪಿ ಅರುಣಾಂಶುಗಿರಿ, ವೆನ್ಲಾಕ್ ಅಧೀಕ್ಷಕ ಡಾ.ಸದಾಶಿವ ಶ್ಯಾನುಭಾಗ್ ಉಪಸ್ಥಿತರಿದ್ದರು.

    ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ಸ್ವಾಗತಿಸಿದರು. ಆರೋಗ್ಯ ಇಲಾಖೆ ಅಧಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
    ಪಾಲಿಕೆ ಸದಸ್ಯರು, ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ಪದಾಧಿಕಾರಿಗಳು, ಜಿಲ್ಲೆಯ 8 ವೈದ್ಯಕೀಯ ಕಾಲೇಜುಗಳ ಮತ್ತು ವಿವಿಧ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು, ಜಿಲ್ಲಾ ಮತ್ತು ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕ ಸಾವು: ಜಿಲ್ಲೆಯಲ್ಲಿ ಸಂಭವಿಸಿರುವ ಒಟ್ಟು ಕೋವಿಡ್ ಮರಣ ಪ್ರಕರಣಗಳಲ್ಲಿ ಶೇ.95ರಷ್ಟು ಪಾಲಿಕೆ ವ್ಯಾಪ್ತಿಗೆ ಸಂಬಂಧಿಸಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು. ಜನಪ್ರತಿನಿಧಿಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎನ್ನುವ ಉದ್ದೇಶದಿಂದ ಸಂವಾದ ನಡೆಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

    ಕೋವಿಡ್ ನಿಯಮಾವಳಿ ಉಲ್ಲಂಘನೆ
    ಸಂವಾದ ಕಾರ್ಯಕ್ರಮದಲ್ಲೇ ‘ಕೋವಿಡ್ ನಿಯಮಾವಳಿ’ ಪಾಲನೆಯಾಗಿಲ್ಲ ಎಂದು ವೈದ್ಯರು ಜಿಲ್ಲಾಡಳಿತವನ್ನು ತರಾಟೆಗೆ ತಗೆದುಕೊಂಡರು. ಸಭೆಯಲ್ಲಿ ಒಂದು ಆಸನ ಬಿಟ್ಟು ಕುಳಿತುಕೊಳ್ಳುವಂತೆ ಸೂಚನೆ ನೀಡಿದ್ದರೂ ಅದನ್ನು ಪಾಲಿಸಿದೆ, ಮಾಸ್ಕ್ ಧರಿಸದೆ ಎಲ್ಲರೂ ಒಟ್ಟಾಗಿ ಕುಳಿತಿದ್ದಾರೆ. ಕಾರ್ಯಕ್ರಮಕ್ಕೆ ಬರುವವರನ್ನು ಸ್ಯಾನಿಟೈಸ್ ಮಾಡಿಲ್ಲ. ಕನಿಷ್ಠ ಕೈಗೆ ಸ್ಯಾನಿಟೈಸರ್ ಕೂಡ ಹಾಕಿಲ್ಲ. ಇಂತಹ ಕಾರ್ಯಕ್ರಮಕ್ಕೆ ಆಹ್ವಾನಿಸಿ ಕರೊನಾ ತಗುಲಿದರೆ ಯಾರು ಹೊಣೆ ಎಂದು ಜಿಲ್ಲಾಧಿಕಾರಿಯವರನ್ನು ಡಾ.ಹಂಸರಾಜ್ ಆಳ್ವ ನೇರವಾಗಿ ಪ್ರಶ್ನಿಸಿದರು. ಉತ್ತರಿಸಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ತಪ್ಪಾಗಿರುವುದನ್ನು ಒಪ್ಪಿಕೊಂಡು, ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts