ತುಮಕೂರು : ಶಿರಾ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ನ.10ರಂದು ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ಶಿರಾ ತಾಲೂಕಿನಾದ್ಯಂತ ನ.10ರ ಬೆಳಗ್ಗೆ 6ರಿಂದ 11ರ ಬೆಳಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ಕುಮಾರ್ ಆದೇಶಿಸಿದ್ದಾರೆ.
ಚುನಾವಣೆಯಲ್ಲಿ ಜಯಗಳಿಸಿದ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಲು ಮೆರವಣಿಗೆ ಮೂಲಕ ಘೋಷಣೆ ಕೂಗುವ ಮತ್ತು ಪರಾಭವಗೊಂಡ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ಜಯಗಳಿಸಿದ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗಲಾಟೆಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಮೆರವಣಿಗೆ, ಅಕ್ರಮ ಗುಂಪು ಸೇರುವಿಕೆ, ಪಟಾಕಿ ಸಿಡಿಸುವಂತಿಲ್ಲ. ಯಾವುದೇ ರೀತಿಯ ಮತೀಯ ಭಾವನೆಗಳನ್ನು ಕೆರಳಿಸುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು, ಘೋಷಣೆ ಕೂಗುವುದು ಹಾಗೂ ಭಿತ್ತಿ ಪತ್ರಗಳನ್ನು ಪ್ರಕಟಿಸಲು ಅವಕಾಶವಿಲ್ಲ.
ಶಾಂತಿ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಭಂಗವುಂಟು ಮಾಡುವ ವದಂತಿಗಳನ್ನು ಹಬ್ಬಿಸಬಾರದು, ಸಾರ್ವಜನಿಕ ಪ್ರಾಣ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗುವ ರೀತಿಯಲ್ಲಿ ವರ್ತಿಸತಕ್ಕದ್ದಲ್ಲ. ಈ ಸಂದರ್ಭದಲ್ಲಿ ಶವಸಂಸ್ಕಾರ, ಮದುವೆ ಮತ್ತು ಧಾರ್ಮಿಕ ಕಾರ್ಯ ಹೊರತುಪಡಿಸಿ ಯಾವುದೇ ಸಭೆ ಸಮಾರಂಭ ಮತ್ತು ಮೆರವಣಿಗೆ ಮಾಡುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ರಾಜಕೀಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಿಜಯೋತ್ಸವ ಸಂಭ್ರಮಾಚರಣೆ, ಮೆರವಣಿಗೆಗಳಿಗೆ ಸೀಮಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.