ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ 1ರಿಂದ 8ನೇ ತರಗತಿಯ ಮಕ್ಕಳಿಗೆ ವಿತರಿಸುತ್ತಿರುವ ಮೊಟ್ಟೆ, ಚಿಕ್ಕಿ/ಬಾಳೆಹಣ್ಣು ಯೋಜನೆಯನ್ನು 46 ದಿನಗಳಿಂದ 100 ದಿನಗಳಿಗೆ ಹಾಗೂ 8ನೇ ತರಗತಿವರೆಗಿನ ಮಕ್ಕಳಿಗಿರುವ ಈ ಯೋಜನೆಯನ್ನು 9 ಮತ್ತು 10ನೇ ತರಗತಿ ಮಕ್ಕಳಿಗೂ ವಿಸ್ತರಿಸುವಂತೆ ಶಿಕ್ಷಣ ಇಲಾಖೆಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಹೋಗಲಾಡಿಸಲು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆ ಅಡಿ ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ 1ರಿಂದ 8ನೇ ತರಗತಿಯ ಮಕ್ಕಳಿಗೆ ಜಾರಿಗೊಳಿಸಲಾಯಿತು. ಅಂದಾಜು 15.29 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಗಿತ್ತು. ಬಳಿಕ ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಯಿತು.
ಇದನ್ನೂ ಓದಿ: ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
100 ದಿನಗಳಿಗೆ ವಿಸ್ತರಿಸಲು ಪ್ರಸ್ತಾವನೆ
ರಾಜ್ಯದಲ್ಲಿ 1ರಿಂದ 8ನೇ ತರಗತಿಯಲ್ಲಿನ ಅಂದಾಜು 46 ಲಕ್ಷ ಶಾಲಾ ಮಕ್ಕಳಿಗೆ 46 ದಿನ ಮೊಟ್ಟೆ ವಿತರಿಸಲಾಗುತ್ತಿದೆ. ಇದನ್ನು 100 ದಿನಗಳಿಗೆ ವಿಸ್ತರಿಸಬೇಕು. ಇದೇ ಯೋಜನೆಯನ್ನು 9 ಮತ್ತು 10ನೇ ತರಗತಿಗೂ ವಿಸ್ತರಿಸಬೇಕು ಎಂದು ಶಿಕ್ಷಣ ಇಲಾಖೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿ ಪ್ರಸ್ತಾವನೆ ಸಲ್ಲಿಸಿದೆ. ನೂರು ದಿನಗಳ ಯೋಜನೆಗೆ ಸುಮಾರು 350 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.
ಇದನ್ನೂ ಓದಿ: ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್
ಹೊಸ ಸರ್ಕಾರದ ನಿರ್ಧಾರದ ಮೇಲೆ ನಿರ್ಣಯ
ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಗೂ ಕೆಲವೇ ದಿನಗಳ ಮುನ್ನ ಈ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗ ನೂತನ ಸರ್ಕಾರ ರಚನೆಯಾಗಿರುವ ಕಾರಣ, ಯಾವ ರೀತಿಯ ನಿರ್ಣಯ ಕೈಗೊಳ್ಳಲಿದೆ ಎಂಬುದನ್ನು ಕಾಯ್ದು ನೋಡಬೇಕಿದೆ. ಶಿಕ್ಷಣ ಇಲಾಖೆ ನಿರ್ಣಯಿಸಿ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದರೆ, ಕೂಡಲೇ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮೊಟ್ಟೆ ವಿತರಿಸುವ ಯೋಜನೆಯನ್ನು 100 ದಿನಗಳಿಗೆ ವಿಸ್ತರಿಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರವು ಒಪ್ಪಿಗೆ ನೀಡಿದರೆ, ಯೋಜನೆ ಜಾರಿಗೊಳಿಸಲಾಗುತ್ತದೆ.
| ರಘುವೀರ ಬಿ.ಎಸ್., ನಿರ್ದೇಶಕ ಬಿಸಿಯೂಟ ಯೋಜನೆ