ಚಿತ್ರದುರ್ಗ: ನಶಿಸುತ್ತಿರುವ ನಮ್ಮ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಹೊಣೆ ಯುವ ಜನರ ಮೇಲಿದೆ ಎಂದು ಪ್ರಾಚಾರ್ಯ ಡಾ.ಪಿ.ಬಿ.ಭರತ್ ಹೇಳಿದರು.
ನಗರದ ಎಸ್ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿರುವ ಸ್ಫೂರ್ತಿ-2023 ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
ಕಣ್ಮರೆ ಆಗುತ್ತಿರುವ ನಮ್ಮ ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಯವರಿಗೆ ಪರಿಚಯಿಸುವ ಜವಾಬ್ದಾರಿ ಯುವಜನರ ಮೇಲಿದೆ. ವಿದೇಶಿ ಸಂಸ್ಕೃತಿಗೆ ಮಾರು ಹೋಗದೆ ನಾಡು-ನುಡಿ, ನೆಲ-ಜಲ, ಸಂಸ್ಕೃತಿಯನ್ನು ಇತರರಿಗೂ ಪರಿಚಯಿಸಬೇಕಿದೆ. ಈ ನಿಟ್ಟಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳ ಈ ಪ್ರಯತ್ನ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅದೇ ರೀತಿ ಆಸಕ್ತಿ ತೋರಿಸುತ್ತಿರುವುದು ಸಂತಸದ ವಿಚಾರ ಎಂದರು.
ಕಾರ್ಯಕ್ರಮದ ಮುಖ್ಯಸಂಚಾಲಕ ಡಾ.ಜೆ.ಎಂ.ಶ್ರೀಶೈಲ ಇತರರಿದ್ದರು. ಉತ್ಸವದ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ರೀತಿಯ ದೇಶಿ ಉಡುಗೆ ತೊಡುಗೆ ತೊಟ್ಟು ಸಂಭ್ರಮಿಸಿದರು.
ಹರ್ಷಿತಾ ಪ್ರಾರ್ಥಿಸಿದರು. ಶ್ವೇತಾ ತಿಗಡಿ, ಎಂ.ಎನ್.ವಾಸುದೇವ ನಿರೂಪಿಸಿದರು. ಅಲಿಮಾ ಮಿಸ್ಬಾ ವಂದಿಸಿದರು.