ಚಿಕ್ಕಮಗಳೂರು: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿರುವ ಸಂಸದ ಪ್ರಜ್ವಲ್ ಹಾಗೂ ಮಾಜಿ ಸಚಿವ ರೇವಣ್ಣ ಅವರನ್ನು ರಕ್ಷಿಸುವ ಕೆಲಸವನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ ಎಂದು ಬಿ ಎಸ್ ಪಿ ಪಕ್ಷದ ಉಡುಪಿ ಚಿಕ್ಕಮಗಳೂರು ಸಂಯೋಜಕ ಪರಮೇಶ್ ಆರೋಪಿಸಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಜಾಮೀನು ಪಡೆಯುವಂತಹ ಪ್ರಕರಣವನ್ನು ದಾಖಲು ಮಾಡಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಿಸಲು ಸರ್ಕಾರವೇ ಮುಂದಾಗಿರುವ ಅನುಮಾನ ವ್ಯಕ್ತವಾಗಿದೆ ಎಂದರು.
ಪ್ರಜ್ವಲ್ ರೇವಣ್ಣ ವಿರುದ್ಧ ಜಾಮೀನು ಸಿಗದಂತಹ ಪ್ರಕರಣಗಳನ್ನು ದಾಖಲು ಮಾಡಬೇಕಿತ್ತು. ಜೊತೆಗೆ ರೇಪ್ ಪ್ರಕರಣವನ್ನು ದಾಖಲು ಮಾಡಬೇಕಿತ್ತು. ಆದರೆ ಇದ್ಯಾವುದನ್ನು ಮಾಡದ ಸರ್ಕಾರ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ದೂರಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಯಾವಾಗಲೂ ಪೆನ್ ಡ್ರೈವ್ ಪ್ರದರ್ಶನ ಮಾಡಿ ನನ್ನ ಬಳಿ ಪೆನ್ ಡ್ರೈವ್ ಇದೆ. ಬಿಡುಗಡೆ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಬಿಡುಗಡೆ ಮಾಡಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೇ ಪ್ರಜ್ವಲ್ ವಿಡಿಯೋ ನಾಲ್ಕು ವರ್ಷ ಹಳೆಯದು ಎಂದು ಹೇಳಿದ್ದಾರೆ. ಈ ಮೂಲಕ ವಿಡಿಯೋದಲ್ಲಿ ಇರುವುದು ನನ್ನ ಮಗನೇ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಬಿ ಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬAಧಪಟ್ಟAತೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಪ್ರಜ್ವಲ್ ಪ್ರಕರಣ ದಾರಿ ತಪ್ಪುವಂತೆ ಮಾಡಿ ಆತನನ್ನು ರಕ್ಷಿಸಲು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳೆರಡು ಪ್ರಯತ್ನಿಸುತ್ತಿರುವಂತೆ ಕಾಣುತ್ತಿದೆ ಎಂದು ದೂರಿದರು.
ತಾವು ಜಾತ್ಯತೀತರು ಎಂದು ಹೇಳಿಕೊಳ್ಳುತ್ತಿದ್ದ ಜೆಡಿಎಸ್ ನಾಯಕರು ಇದೀಗ ತಮ್ಮ ಕುಟುಂಬವನ್ನು ರಕ್ಷಿಸಿಕೊಳ್ಳುವ ಉz್ದೆÃಶದಿಂದ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳಿರುವುದು ಕಳೆದ ಒಂದು ವರ್ಷದ ಹಿಂದೆಯೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ತಿಳಿದಿತ್ತು. ಹೀಗಾಗಿ ಕುಟುಂಬವನ್ನು ಉಳಿಸಿಕೊಳ್ಳುವ ಕಾರಣಕ್ಕೆ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬAಧಪಟ್ಟAತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಪ್ರಜ್ವಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿ ಎಸ್ ಪಿ ಮುಖಂಡರಾದ ಕೆ.ಬಿ.ಸುಧಾ, ಮಂಜುನಾಥ್, ಕುಮಾರ್, ವಸಂತ್, ವಿಜಯ್, ಮಂಜುಳಾ ಮತ್ತಿತರರಿದ್ದರು.