More

    ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮ ರೂಪಿಸಿ ; ತುಮಕೂರಿನ ಬಿಜಿಎಸ್ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

    ತುಮಕೂರು : ಕರೊನಾ ಹಾವಳಿಯ ನಂತರ ಶಾಲೆ, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಕಷ್ಟಗಳನ್ನು ಅನುಭವಿಸುವಂತಾಗಿದ್ದು ವಿದ್ಯಾರ್ಥಿಸ್ನೇಹಿ ಕಾರ್ಯಕ್ರಮಗಳು ಜಾರಿಯಾಗಬೇಕು ಎಂದು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಬಿಜಿಎಸ್ ವೃತ್ತದಲ್ಲಿ ಸೋಮವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.

    ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶೀ ಅಪ್ಪು ಪಾಟೀಲ ಮಾತನಾಡಿ, ಕರೊನಾ 2ನೇ ಅಲೆಗೆ ತತ್ತರಿಸಿದ್ದ ರಾಜ್ಯ ಸಹಜ ಸ್ಥಿತಿಗೆ ಮರಳಿದೆ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯು, ಪದವಿ, ಸ್ನಾತಕೋತ್ತರ ತರಗತಿಗಳೆಲ್ಲವೂ ಮರು ಪ್ರಾರಂಭವಾಗಿ ವಿದ್ಯಾರ್ಥಿಗಳೆಲ್ಲ ಉತ್ಸಾಹದಿಂದ ಶಾಲಾ-ಕಾಲೇಜುಗಳಿಗೆ ಬರುತ್ತಿದ್ದಾರೆ. ಆದರೆ, ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ವಿದ್ಯಾರ್ಥಿಗಳಿಗೆ ಕೆಲವೊಂದು ಸಮಸ್ಯೆಗಳು ಉಧ್ಬವಿಸುತ್ತಿರುವುದು ಶೋಚನಿಯ, ಈ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಇತ್ಯರ್ಥಗೊಳಿಸಬೇಕು ಎಂದರು.

    ಕರೊನಾ ಕಾರಣಕ್ಕೆ ಬದಲಾದ ತರಗತಿಗಳ ಸಮಯಕ್ಕೆ ಹಾಜರಾಗಲು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ ಹಾಗೂ ಲಾಕ್‌ಡೌನ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಸಾರಿಗೆ ಸೇವೆ ಕೆಲ ಹಳ್ಳಿಗಳಲ್ಲಿ ಇನ್ನೂ ಪುನರಾರಂಭವಾಗಿಲ್ಲ. ಇದರಿಂದಾಗಿ ರಾಜ್ಯದ ಗ್ರಾಮೀಣ ಭಾಗದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಾರಿಗೆ ಸಂಚಾರಕ್ಕೆ ತೊಂದರೆಯಾಗಿದೆ, ಸಾರಿಗೆ ಇಲಾಖೆ ತಕ್ಷಣವೇ ವಿದ್ಯಾರ್ಥಿಗಳ ಅವಶ್ಯಕತೆಗೆ ಅನುಗುಣವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಆರಂಭಿಸಬೇಕು ಎಂದರು.
    ಡಿಪ್ಲೋಮಾ ಇಂಜಿನಿಯರಿಂಗ್, ಸ್ನಾತಕ-ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿಎಚ್‌ಡಿ ಓದುತ್ತಿರುವ ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ಪಡೆಯದೇ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಈ ಎಲ್ಲ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣಕ್ಕೆ ಬಿಡುಗಡೆಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳ ಅಧ್ಯಯನಕ್ಕೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಗೆ ಮಾಡಬೇಕು ಎಂದರು.

    ಪರದಾಡುವ ಪರಿಸ್ಥಿತಿ : ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳನ್ನು ಅವಲಂಬಿತರಾಗಿದ್ದಾರೆ, ಹೊಸದಾಗಿ ಶಾಲಾ ಕಾಲೇಜಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ತರಗತಿಗಳು ಆರಂಭವಾಗಿವೆ, ಆದರೆ ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆ ಮುಗಿಯದೇ ದಿನನಿತ್ಯ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಹೇಳಿದರು. ಪ್ರಸಕ್ತ ವರ್ಷದ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಹಾಸ್ಟೆಲ್ ಗಳನ್ನು ತೆರೆಯಬೇಕಿದೆ ಮತ್ತು ಹಾಸ್ಟೆಲ್‌ಗಳಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯಿಸುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts