ಶನಿವಾರಸಂತೆ: ನಿಡ್ತ ಗ್ರಾಮದ ನ್ಯಾಯಬೆಲೆ ಅಂಗಡಿ ವಿರುದ್ಧ ನಕಲಿ ದೂರು ನೀಡಿರುವುದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ನಿಡ್ತ ಕೃಷಿಪತ್ತಿನ ಸಹಕಾರ ಸಂಘದ ಬಳಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಬೆಲೆ ಅಂಗಡಿ ವಿರುದ್ಧ ಗ್ರಾಮದ ಒಂದಿಬ್ಬರು ನಕಲಿ ಸಹಿಗಳನ್ನು ಹಾಕಿ ಸೋಮವಾರಪೇಟೆ ತಹಸೀಲ್ದಾರರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಮುಂಭಾಗ ಸೇರಿ ದೂರು ನೀಡಿದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಬೆಲೆ ಅಂಗಡಿಯಲ್ಲಿ ಸಮರ್ಪಕವಾಗಿ ಪಡಿತರ ವಿತರಣೆಯಾಗುತ್ತಿದೆ. ಕೆಲವರು ನಕಲಿ ಸಹಿಗಳನ್ನು ಸೃಷ್ಟಿಸಿ ದೂರು ನೀಡಿದ್ದಾರೆ. ನಕಲಿ ಸಹಿ ಸೃಷ್ಟಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮೂಲಕ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು.