ಹುಬ್ಬಳ್ಳಿ: ಅನಿಯಮಿತ ಲೋಡ್ ಶೆಡ್ಡಿಂಗ್ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಮಂಗಳವಾರ ಇಲ್ಲಿಯ ನವನಗರದ ಹೆಸ್ಕಾಂ ಮುಖ್ಯ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಬೆಳಗಾವಿ ಜಿಲ್ಲೆಯ ನೂರಾರು ರೈತರು ಕಚೇರಿ ಮುಂದೆ ಜಮಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮುಂಗಾರು ಮಳೆಯ ಅಭಾವದಿಂದ ಈಗಾಗಲೇ ಅನೇಕ ಸಮಸ್ಯೆಗಳು ಎದುರಾಗಿವೆ. ಬೋರ್ವೆಲ್ ಇದ್ದರೂ ನೀರು ಹಾಯಿಸಲು ಆಗುತ್ತಿಲ್ಲ. ಇದರಿಂದ ಬೆಳೆಗಳು ಒಣಗುತ್ತಿವೆ.
ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚುನಪ್ಪ ಪೂಜೇರಿ, ಶಶಿಕಾಂತ ಪಡಸಲಗಿ, ಸುರೇಶ ಪರಗನ್ನವರ, ಶಾಂತಗೌಡ ವೀರಗೌಡರ, ಮಹೇಶ ಸುಬೇದಾರ, ಶಿವಾನಂದ ಮುಗಳಿಹಾಳ, ರಾಹುಲ ಕುಬಕರಡಿ ಹಾಗೂ ಹೆಸ್ಕಾಂ ವ್ಯಾಪ್ತಿಯ ವಿವಿಧ ಜಿಲ್ಲೆಗಳ ನೂರಾರು ರೈತರು ಪಾಲ್ಗೊಂಡಿದ್ದರು.
ಮನವಿ ಸ್ವೀಕರಿಸಿದ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಮ್ಮದ ರೋಶನ್ ಅವರು, ರೈತರ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ನಿರೀಕ್ಷಿತ ಮಳೆಯಾಗದ ಕಾರಣ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಸರ್ಕಾರದ ಗಮನಕ್ಕೆ ತರಲಾಗಿದೆ. ಖರೀದಿಸಿಯಾದರೂ ರೈತರಿಗೆ ವಿದ್ಯುತ್ ನೀಡುವಂತೆ ಸರ್ಕಾರ ಸೂಚಿಸಿದ್ದು, ಶ್ರೀ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದರು.