ಮಡಿಕೇರಿ: ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ ಖಂಡಿಸಿ ಗೋ ಸಂರಕ್ಷಣಾ ಸಂವರ್ಧನ ಸಮಿತಿ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ವಿಶ್ವ ಹಿಂದೂ ಪರಿಷತ್, ಹಿಂದೂ ಜಗರಣಾ ವೇದಿಕೆ ಮತ್ತು ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಪಾಲ್ಗೊಂಡು ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದರು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಮಾನವ ಸರಪಳಿ ರಚಿಸಿದ ಪ್ರತಿಭಟನಾಕಾರರು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯಿಸಿದರು. ಬಳಿಕ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಭೋಜೇಗೌಡ, ಮತಾಂಧ ಜಿಹಾದಿಗಳ ದುಷ್ಕೃತ್ಯದ ಬಗ್ಗೆ ಹಿಂದೂ ಸಮಾಜದಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಹಾರ ಮೂಲದ ವ್ಯಕ್ತಿಯನ್ನು ಬಂಧಿಸಿ ಕುಡಿದ ಮತ್ತಲಿನಲ್ಲಿ ಕೆಚ್ಚಲು ಕತ್ತರಿಸಿದ್ದಾನೆಂದು ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಆದರೆ, ಇದು ಒಬ್ಬ ವ್ಯಕ್ತಿಯಿಂದ ಆಗಿದಲ್ಲ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇರುವ ಸಂಶಯವಿದ್ದು, ವಕ್ಫ್ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಸುಗಳನ್ನೇ ಟಾರ್ಗೆಟ್ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರಕರಣವನ್ನು ಎನ್ಐಎ ತನಿಖೆಗೆ ಒಳಪಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ ಭೋಜೇಗೌಡ, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ನ ಜಿಲ್ಲಾ ಮಠ ಮಂದಿರ ಪ್ರಮುಖರಾದ ಮಹಬಲೇಶ್ವರ ಭಟ್, ಹಸುವಿನ ಕೆಚ್ಚಲು ಕತ್ತರಿಸಿದ ಆರೋಪಿಗೆ ಉಗ್ರ ಶಿಕ್ಷೆ ವಿಧಿಸಬೇಕು. ಕೇಂದ್ರ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲೂ ಅನುಷ್ಠಾನಕ್ಕೆ ತರಬೇಕು. ಹಿಂದೂಗಳು ಹಸು ಸಾಕಾಣಿಕೆಯ ಮೂಲಕ ಗೋವುಗಳ ರಕ್ಷಣೆಗೆ ಮುಂದಾಗಬೇಕೆಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ವಿಹೆಚ್ಪಿ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಪ್ರಮುಖರಾದ ರವಿ ಕುಶಾಲಪ್ಪ, ಅನಿತಾ ಪೂವಯ್ಯ, ಕುಕ್ಕೆರ ಅಜಿತ್, ವಿಹೆಚ್ಪಿ ಜಿಲ್ಲಾ ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಕೋಶಾಧಿಕಾರಿ ಸಂಪತ್ ಕುಮಾರ್, ತಾ.ಅಧ್ಯಕ್ಷೆ ಮಮತಾ, ನಗರಾಧ್ಯಕ್ಷ ಗುರುಪ್ರಸಾದ್ ಸೇರಿದಂತೆ ಹಿಂದೂ ಕಾರ್ಯಕರ್ತರು ಪಾಲ್ಗೊಂಡಿದ್ದರು.