ರಾಣೆಬೆನ್ನೂರ: ಮಣಿಪುರದಲ್ಲಿ ಮಹಿಳೆಯರ ನಗ್ನ ಮೆರವಣಿಗೆ ಕೃತ್ಯ ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಮಿನಿ ವಿಧಾನಸೌಧ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಮಹಿಳೆಯರ ಮೇಲಿನ ಅಮಾನುಷ ಕೃತ್ಯದಿಂದ ದೇಶವೇ ತಲೆ ತಗ್ಗಿಸುವಂತಾಗಿದೆ. ಇಂತಹ ಘಟನೆ ನಾಗರಿಕ ಸಮಾಜಕ್ಕೆ ನಾಚಿಕೆಪಡುವಂಥದು. ಕೇಂದ್ರ ಮತ್ತು ಮಣಿಪುರ ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದೇಶದ ಅನೇಕ ರಾಜ್ಯಗಳಲ್ಲಿ ಹೆಣ್ಣಿನ ಮೇಲೆ ದೌರ್ಜನ್ಯ, ಅತ್ಯಾಚಾರದಂಥ ಅನೇಕ ಪ್ರಕರಣಗಳು ನಡೆಯುತ್ತಲೇ ಇವೆ. ಸ್ವಾತಂತ್ರ್ಯ ಸಿಕ್ಕರೂ ಹಗಲಿನಲ್ಲಿ ಮನೆಯಿಂದ ಹೆದರಿ ಹೊರಗೆ ಬರದಂಥ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ತಹಸೀಲ್ದಾರ್ ಗುರುಬಸವರಾಜ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರಮುಖರಾದ ಚಂದ್ರಶೇಖರ ಬಣಕಾರ, ಸೋಮರೆಡ್ಡಿ ಹಾದಿಮನಿ, ಖಲೀಲಸಾಬ್ ದೊಡ್ಡಮನಿ, ರತ್ನಮ್ಮ ಕೋಟಿಹಾಳ, ದ್ಯಾಮವ್ವ ವಡ್ಡರ, ಲಕ್ಷ್ಮೀ ಗಿರಡ್ಡಿ, ಸುರೇಶ ಪಾಳೇದ, ಬಸವರಾಜ ಕರೆಕಟ್ಟಿ, ಹುಸೇನಸಾಬ ವಡೇಹೊಸೂರ, ಹರೀಶ ಕಮಾಪುರ ಮತ್ತಿತರರಿದ್ದರು.