ಚಿತ್ರದುರ್ಗ: ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಪ್ರೋತ್ಸಾಹಧನ, ಮಾಸಿಕ ಪಿಂಚಣಿ ಸೌಲಭ್ಯ ಜಾರಿಗೆ ಆಗ್ರಹಿಸಿ ಎಐಟಿಯುಸಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದುಡಿಯುವ ವರ್ಗದ ಈ ನ್ಯಾಯಯುತ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅನುಷ್ಠಾನ ಸಂಬಂಧ 3 ದಶಕ ಸುದೀರ್ಘವಾಗಿ ಶ್ರಮಿಸಿ ನಿವೃತ್ತಿಯಾದ ನಂತರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ವಯೋಸಹಜ ಕಾಯಿಲೆಯಿಂದಾಗಿ ಔಷಧೋಪಚಾರಕ್ಕೂ ತೊಂದರೆ ಆಗಿದೆ ಎಂದು ಅಳಲು ತೋಡಿಕೊಂಡರು.
ನಿವೃತ್ತಿ ನಂತರ ಕನಿಷ್ಠ ಮಾಸಿಕ 5 ಸಾವಿರ ರೂ. ಪಿಂಚಣಿ ಹಾಗೂ ಸುಪ್ರೀಕೋರ್ಟ್ ತೀರ್ಪಿನಂತೆ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿದ್ದು, ಜಾರಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಸುರೇಶ್ಬಾಬು, ಅಧ್ಯಕ್ಷೆ ಎಸ್.ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿ ಜಮುನಾಬಾಯಿ, ಸಾವಿತ್ರಮ್ಮ, ರಾಧಮ್ಮ, ರತ್ನಮ್ಮ, ಮಹೇಶ್ವರಿ, ನಿರ್ಮಲಾ ಇತರರಿದ್ದರು.