ಮೈಸೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು
ಪ್ರತಿಭಟನೆ ನಡೆಸಿದರು.
ನಗರದ ಗಾಂಧಿವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಮೇಣದ ಬತ್ತಿ ಬೆಳಗಿ ಆಕ್ರೋಶ ವ್ಯಕ್ತಪಡಿಸಿದರು.
ಹಾಸನದಲ್ಲಿ ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿದ್ದು, ಇದಕ್ಕೆ ಸಂಬಂಧಿಸಿದ ಚಿತ್ರ, ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿವೆ. ಈ ಮೂಲಕ ಸಂಸದರ ವಿಕೃತಿ ಬಯಲಾಗಿದೆ ಎಂದು ಕಿಡಿಕಾರಿದರು.
ಈ ಪ್ರಕರಣದ ಕುರಿತು ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡವು(ಎಸ್ಐಟಿ) ವಿದೇಶಕ್ಕೆ ಪರಾರಿಯಾಗಿರುವ ಆರೋಪಿಯನ್ನು ಬಂಧಿಸಬೇಕು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ, ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಮುಖಂಡರಾದ ಪುಷ್ಪಲತಾ ಚಿಕ್ಕಣ್ಣ, ಲತಾ ಸಿದ್ಧಶೆಟ್ಟಿ, ಲತಾಮೋಹನ್, ಭವ್ಯ, ಇಂದಿರಾ, ನಾಗರತ್ನ, ರಾಧಾಮಣಿ, ಸೌಭಾಗ್ಯ, ಸುಶೀಲ ಕೇಶವಮೂರ್ತಿ ಇನ್ನಿತರರಿದ್ದರು.