ಹಾಸನ: ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ಎಲ್ಲ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಸಂಘಟನೆ (ಎಐಡಿಎಸ್ಒ) ನೇತೃತ್ವದಲ್ಲಿ ಸರ್ಕಾರಿ
ಕಲಾ ಕಾಲೇಜು ವಿದ್ಯಾರ್ಥಿಗಳು ಶನಿವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.
ಬಿಎ, ಬಿಕಾಂ, ಬಿಸಿಎ, ಬಿಬಿಎಂ, ಬಿಎಸ್ಸಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ನ ಅವಶ್ಯಕತೆ ಹೆಚ್ಚಿದೆ. ವರ್ಷದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಆದರೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯೋಜನೆಯ ಫಲ ಸಿಗುತ್ತಿಲ್ಲ ಎಂದು ದೂರಿದರು.
ಪದವಿ ವ್ಯಾಸಂಗ ಮುಗಿಸಿ ಉನ್ನತ ಶಿಕ್ಷಣ ಅಥವಾ ಉದ್ಯೋಗಕ್ಕೆ ಸೇರುವ ಯುವಕ, ಯುವತಿಯರಿಗೆ ಲ್ಯಾಪ್ಟಾಪ್ ನೀಡಿದರೆ ಅನುಕೂಲವಾಗುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಬಳಕೆಗೆ ಮಹತ್ವ ನೀಡಲಾಗಿದೆ. ಸರ್ಕಾರ ವಿವಿಧ ಅಭಿವೃದ್ಧಿಗಾಗಿ ಕೋಟ್ಯಂತರ ಹಣ ವ್ಯಯಿಸುತ್ತದೆ. ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೂ ಗಮನ ಹರಿಸಬೇಕು. ಉನ್ನತ ಶಿಕ್ಷಣ ಸಚಿವರು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಎಐಡಿಎಸ್ಒ ಜಿಲ್ಲಾ ಸಮಿತಿ ಮುಖಂಡರಾದ ಅಂಕಿತಾ, ಅಸಿಮ್, ಐಶ್ವರ್ಯಾ, ಸೋನಿಕಾ, ಅಂಜಲಿ, ಪೂಜಾ, ಅನುಷಾ, ಶಿವಪ್ರಸಾದ್ ಇದ್ದರು.