More

    ಅತಿವೃಷ್ಟಿ ಜಿಲ್ಲೆ ಘೊಷಣೆಗೆ ಒತ್ತಾಯ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ 25ರಂದು

    ಹಾವೇರಿ: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಸುರಿದ ಅಕಾಲಿಕ ಮಳೆಯಿಂದ ರೈತರು ಅಪಾರ ಬೆಳೆ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ಅತಿವೃಷ್ಟಿ ಜಿಲ್ಲೆಯಂದು ಘೊಷಣೆ ಮಾಡಬೇಕು ಹಾಗೂ ವಿದ್ಯುತ್ ಖಾಸಗೀಕರಣ ಕೈಬಿಡುವಂತೆ ಆಗ್ರಹಿಸಿ ಆ. 25ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘ ಹಾಗೂ ಹಸಿರುಸೇನೆಯ ಅಧ್ಯಕ್ಷ ಆರ್.ವಿ. ಕೆಂಚಳ್ಳೇರ ತಿಳಿಸಿದರು.

    ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಹಾನಿಯಾಗಿದ್ದರೂ ಅಧಿಕಾರಿಗಳು ಸರಿಯಾದ ಸಮೀಕ್ಷೆ ನಡೆಸಿಲ್ಲ. 3.30 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದ್ದು, ಮೆಕ್ಕೆಜೋಳ, ಹತ್ತಿ, ಸೋಯಾಬೀನ್, ಶೇಂಗಾ ಬೆಳೆ ಸಂಪೂರ್ಣ ನಾಶವಾಗಿದೆ. ಆದರೆ, ಕೃಷಿ ಇಲಾಖೆ ಪಾರದರ್ಶಕತೆಯಿಂದ ಸಮೀಕ್ಷೆ ನಡೆಸದೇ ಕೇವಲ 66 ಸಾವಿರ ಹೆಕ್ಟೇರ್ ಪ್ರದೇಶ ನಷ್ಟವಾಗಿದೆ ಎಂದು ಸಮೀಕ್ಷೆ ವರದಿ ಸಿದ್ಧಪಡಿಸಿದ್ದಾರೆ. ಕೂಡಲೆ ಮರು ಸಮೀಕ್ಷೆ ಮಾಡಿ ಸರ್ಕಾರಕ್ಕೆ ಸರಿಯಾದ ವರದಿ ಸಲ್ಲಿಸಬೇಕು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಸೇರಿ ಪ್ರತಿ ಹೆಕ್ಟೇರ್​ಗೆ 13,600 ರೂ. ಪರಿಹಾರ ಕೊಡುವುದಾಗಿ ನಿರ್ಧರಿಸಿದೆ. ಆದರೆ, ಈ ಹಣ ಬೀಜ ಗೊಬ್ಬರ ಖರೀದಿಗೂ ಸಾಲುವುದಿಲ್ಲ. ಆದ್ದರಿಂದ 1 ಎಕರೆಗೆ 25 ಸಾವಿರ ರೂ. ಹಾಗೂ ತೋಟಗಾರಿಕೆ ಬೆಳೆಗೆ ಎಕರೆಗೆ 50 ಸಾವಿರ ರೂ. ಪರಿಹಾರ ಕೊಡಬೇಕು ಎಂದರು.

    ವಿದ್ಯುತ್ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಮಸೂದೆ ಮಂಡಿಸಿದ್ದು, ಇದು ಅತ್ಯಂತ ಅಪಾಯಕಾರಿ ಹಾಗೂ ಆತಂಕ ವಿಷಯ. ಇದರಿಂದ ಪಂಪ್ ಸೆಟ್ ಬಳಕೆದಾರರು ಬೀದಿಗೆ ಬರುವುದರಲ್ಲಿ ಸಂದೇಹವೇ ಇಲ್ಲ. ರಾಜ್ಯ ಸರ್ಕಾರವೂ ವಿದ್ಯುತ್ ಖಾಸಗೀಕರಣ ಮಾಡುತ್ತಿದ್ದು ರಾಜ್ಯದ ರೈತರ ಹಿತದೃಷ್ಟಿಯಿಂದ ಇದನ್ನು ಕೈಬಿಡಬೇಕು ಎಂದರು.

    ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಜಿಲ್ಲೆಯಲ್ಲಿ ಶೇ. 60ಕ್ಕಿಂತಲೂ ಹೆಚ್ಚು ಮಳೆಯಾಗಿದೆ. ಬಿತ್ತನೆ ಮಾಡಿರುವ ಬೀಜ, ಗೊಬ್ಬರವೂ ನೀರು ಪಾಲಾಗಿದೆ. ಬರಗಾಲ ಬಿದ್ದಾಗ ಹೇಗೆ ಸರ್ಕಾರ ಎಲ್ಲ ರೈತರಿಗೂ ಪರಿಹಾರ ಕೊಡುತ್ತೋ ಹಾಗೆಯೇ ಇದನ್ನು ‘ಹಸಿ ಬರಗಾಲ’ ಎಂದು ಘೊಷಿಸಿ ಎಲ್ಲ ರೈತರಿಗೂ ಪರಿಹಾರ ನೀಡಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts