ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) 11 ಕಡೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಬಂಧಿತ ಮಾಜಿ ಎಡಿಜಿಪಿ ಅಮೃತ್ ಪೌಲ್, ಡಿವೈಎಸ್ಪಿ ಶಾಂತಕುಮಾರ್ ಸೇರಿ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ಪ್ರಮುಖ ದಾಖಲೆಗಾಗಿ ಬೆಳಗ್ಗೆ 11 ಗಂಟೆಯಿಂದ ಪರಿಶೀಲನೆ ನಡೆಸುತ್ತಿದ್ದಾರೆ.
ಮನಿ ಲ್ಯಾಂಡ್ರಿಂಗ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿಯಾಗಿದೆ. ಸಹಕಾರ ನಗರದಲ್ಲಿರುವ ಅಮೃತ್ ಪಾಲ್ ನಿವಾಸ, ಆಡುಗೋಡಿ ಟೆಕ್ನಿಕಲ್ ಸೆಲ್ನಲ್ಲಿರುವ ಶಾಂತಕುಮಾರ್ರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಕಳೆದ ಜು.4ರಂದು ಅಮೃತ್ ಪೌಲ್ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಮೊದಲ ಬಾರಿಗೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರನ್ನು ಪಿಎಸ್ಐ ಹುದ್ದೆ ನೇಮಕಾತಿ ಹಗರಣ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಇದಕ್ಕೂ ಮುನ್ನವೇ ಅಂದರೆ ಮೇ 12ರಂದು ಡಿವೈಎಸ್ಪಿ ಶಾಂತಕುಮಾರ್ರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.
ಪಂಜಾಬ್ ಮೂಲದ ಅಮೃತ್ ಪೌಲ್, 1995ರ ಬ್ಯಾಚ್ನ ಐಪಿಎಸ್ ಅಧಿಕಾರಿ. 2000-2003ರ ವರೆಗೆ ಉಡುಪಿ ಎಸ್ಪಿ ಆಗಿ ಕಾರ್ಯ ನಿರ್ವಹಿಸಿದ್ದರು. 2014ರಲ್ಲಿ ಕರ್ನಾಟಕ ವೆಸ್ಟರ್ನ್ ರೇಂಜ್ ಐಜಿಯಾಗಿ ಕೆಲಸ ಮಾಡಿದ ಅಮೃತ್ ಪೌಲ್, 2018ರಲ್ಲಿ ಸೆಂಟ್ರಲ್ ರೇಂಜ್ ಐಜಿಯಾಗಿ ನೇಮಕವಾದರು. 2019ರಲ್ಲಿ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿ ಬಡ್ತಿ ಹೊಂದಿದ್ದರು. ಕರ್ನಾಟಕದ ನೇಕಾತಿಯ ಸಂಪೂರ್ಣ ಜವಾಬ್ದಾರಿ ಇವರದ್ದೇ ಆಗಿತ್ತು. ಒಎಂಆರ್ ಶೀಟ್ ಕೊಠಡಿ ಕೀ ಇವರ ಉಸ್ತುವಾರಿಯಲ್ಲೇ ಇತ್ತು. ಅಕ್ರಮದ ವಹಿವಾಟು ನೇಮಕಾತಿ ವಿಭಾಗದ ಕಚೇರಿಯಲ್ಲೇ ನಡೆದಿದೆ, ಎಡಿಜಿಪಿ ಆಗಿದ್ದ ಅಮೃತ್ ಪೌಲ್ ಅವರೇ ಡೀಲ್ ಕುದುರಿಸಿದ್ದರು ಎಂಬ ಆರೋಪವಿದೆ.
ಚಿನ್ನದ ವ್ಯಾಮೋಹಕ್ಕೆ ಭೂಮಿ ಹೋಯ್ತು! 20 ಲಕ್ಷ ರೂಪಾಯಿಗೆ 8 ಕೆಜಿ ಚಿನ್ನದ ಆಮಿಷ… ಸಂಕಷ್ಟದಲ್ಲಿ ದಂಪತಿ…