ಎನ್.ಆರ್.ಪುರ: ಭಾರತದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ರೋಟರಿ ಸಂಸ್ಥೆಯ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ದೇಶದಾದ್ಯಂತ ಏಕಕಾಲದಲ್ಲಿ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಭಾರತದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆಯಾಗಿದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಯಾವುದೇ ಸರ್ಕಾರಿ ಕಾರ್ಯಕ್ರಮ ಯಶಸ್ವಿಗೆ ಸಂಘ, ಸಂಸ್ಥೆಗಳ ಸಹಕಾರ ಅಗತ್ಯವಾಗಿದೆ ಎಂದರು.
ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ವಿಜಯಕುಮಾರ್ ಮಾತನಾಡಿ, ತಾಲೂಕಿನಲ್ಲಿ 05 ವರ್ಷದೊಳಗಿನ 4,414 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 97 ಲಸಿಕಾ ಕೇಂದ್ರಗಳಲ್ಲಿ 21 ಮೇಲ್ವಿಚಾರಕರು, 388 ಲಸಿಕಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಎರಡನೇ ದಿನ ಮನೆ, ಮನೆಗೆ ಭೇಟಿ ನೀಡಿ ಲಸಿಕೆ ಹಾಕಿಸಿಕೊಳ್ಳದಿರುವ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದರು.
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಎಂ.ಶ್ರೀನಿವಾಸ್, ತಹಸೀಲ್ದಾರ್ ತನುಜಾ ಟಿ.ಸವದತ್ತಿ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ, ಆಸ್ಪತ್ರೆ ರಕ್ಷಾ ಸಮಿತಿಯ ಸದಸ್ಯರಾದ ಶ್ರೀಧರ್, ರತನ್ಗೌಡ, ಧನಲಕ್ಷ್ಮೀ, ಏಲಿಯಾಸ್, ಅಭಿಲಾಷ್, ರೋಟರಿ ಅಧ್ಯಕ್ಷ ಕಿರಣ್ ನೆಲಗದ್ದೆ, ತಾಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷ ಈ.ಸಿ.ಜೋಯಿ, ಜಿಪಂ ಮಾಜಿ ಸದಸ್ಯ ಪಿ.ಆರ್.ಸದಾಶಿವ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಇದ್ದರು.