ಗಂಗೊಳ್ಳಿ: ಮಕ್ಕಳು ದೇಶದ ಸಂಪತ್ತು. ಅವರಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಬೈಂದೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ ಹೇಳಿದರು.
ಮರವಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಶನಿವಾರ ಆಯೋಜಿಸಲಾದ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ, ಮಕ್ಕಳ ಹಕ್ಕುಗಳ ಗ್ರಾಮ ಸಭೆ ಹಾಗೂ ಓದುವ ಬೆಳಕು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರೊನಾ ನಿರ್ಬಂಧದ ಕಾರಣ ಮಕ್ಕಳು ಶಿಕ್ಷಣ ಮತ್ತು ಓದಿನಿಂದ ವಿಮುಖರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಗ್ರಾಪಂ ಮತ್ತು ಗ್ರಂಥಾಲಯದ ಮೂಲಕ ಓದುವ ಬೆಳಕು ಕಾರ್ಯಕ್ರಮ ಹಮ್ಮಿಕೊಂಡಿದೆ. ಅದರ ಅಧೀನದಲ್ಲಿ 6ರಿಂದ 18ವರ್ಷ ಪ್ರಾಯದೊಳಗಿನ ಮಕ್ಕಳಿಗೆ ಉಚಿತವಾಗಿ ಗ್ರಂಥಾಲಯದ ಸದಸ್ಯತ್ವ ನೀಡಿ, ಓದಲು ಪುಸ್ತಕಗಳನ್ನು ನೀಡಲಾಗುತ್ತದೆ. ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಭಾವಚಿತ್ರಕ್ಕೆ ಹೂಮಾಲೆ ಹಾಕುವ ಮೂಲಕ ಮಕ್ಕಳ ದಿನ ಆಚರಿಸಲಾಯಿತು. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಶ್ರಾವ್ಯಾ ಆಚಾರ್ಯ ಅವರನ್ನು ಗೌರವಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಸತ್ಯನಾ ಕೊಡೇರಿ, ಪಂಚಾಯಿತಿ ಕಾರ್ಯದರ್ಶಿ ದಿನೇಶ್ ಶೇರುಗಾರ್, ಗ್ರಂಥಾಲಯ ಸಹಾಯಕಿ ಶ್ಯಾಮಲಾ ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ಶೇಖರ್ ಮರವಂತೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಗುರುರಾಜ್ ವಂದಿಸಿದರು.