ಬೆಂಗಳೂರು: ನಿನ್ನೆ ಮೆಜೆಸ್ಟಿಕ್ನಲ್ಲಿ ಕಾಂಗ್ರೆಸ್ ನಾಯಕರು ಸೃಷ್ಟಿ ಮಾಡಿದ್ದ ಅವಾಂತರಕ್ಕೆ ಕಂದಾಯ ಸಚಿವ ಆರ್. ಅಶೋಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ಯಾವುದೇ ರಾಜಕಾರಣಗಳು ಇಂತಹ ಸಂದರ್ಭದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಬಾರದು. 150 ವರ್ಷದ ಇತಿಹಾಸ ಇರುವ ಕಾಂಗ್ರೆಸ್ ಕರೊನಾ ವೈರಸ್ ಸಂದರ್ಭದಲ್ಲಿ ಇಷ್ಟು ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದ್ದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಉತ್ತರಕುಮಾರನ ಪೌರುಷವನ್ನು ತೋರಿಸುತ್ತಿದ್ದಾರೆ. ಅವರಿಗೆ ನಾಚಿಕೆ ಆಗಬೇಕು. ನಮ್ಮ ಬಳಿ ಕೋಟ್ಯಂತರ ರೂಪಾಯಿ ಇದೆ ಎಂದು ಹೋದಲ್ಲಿ, ಬಂದಲ್ಲಿ ಹೇಳಿಕೊಳ್ತಿದ್ದಾರೆ. ಈ ಮೂಲಕ ನೊಂದ ಜನರಿಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಆರೋಪಿಸಿದರು.
ಇನ್ನು ಡಿ.ಕೆ.ಶಿವಕುಮಾರ್ ಅವರು ಕೂಲಿ ಕಾರ್ಮಿಕರನ್ನು ಉಚಿತವಾಗಿ ಕರೆದುಕೊಂಡು ಹೋಗಿ ಅವರ ಊರಿಗೆ ಬಿಡಲು ಕೆಪಿಸಿಸಿಯಿಂದ ಕೆಎಸ್ಆರ್ಟಿಸಿಗೆ 1 ಕೋಟಿ ರೂಪಾಯಿ ಚೆಕ್ ನೀಡಿದ್ದಾಗಿ ಹೇಳಿಕೊಂಡಿದ್ದರು. ಈ ಬಗ್ಗೆ ಕೂಡ ಆರ್. ಅಶೋಕ್ ಮಾತನಾಡಿದ್ದಾರೆ.
ಹಿಂದೆ ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಯಾವುದಕ್ಕೂ ದೇಣಿಗೆ ನೀಡಿರಲಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷರಾಗುತ್ತಿದ್ದಂತೆ ಏಕಾಏಕಿ ದುಡ್ಡು ಬರ್ತಿದೆ. ಅದು ನಮಗೆ ತೀವ್ರ ಆಶ್ಚರ್ಯವನ್ನುಂಟು ಮಾಡಿದೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರು ನೀಡಿದ ಚೆಕ್ ಮೇಲೆ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಹೆಸರು ಇದೆ. ಆದರೆ ಡಿ.ಕೆ.ಶಿವಕುಮಾರ್ ತಾವು ಚೆಕ್ ಕೊಟ್ಟಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದರ ಮೇಲೆ ಡಿಕೆಶಿ ಸಹಿ ಇಲ್ಲ. ಇವರಿಗೆ ಅಕೌಂಟ್ ಚೇಂಜ್ ಮಾಡುವ ಜ್ಞಾನ ಕೂಡ ಇಲ್ಲ. ಹಾಗಾಗಿ ಚೆಕ್ ನಕಲಿ. ನಾವದನ್ನು ತೆಗೆದುಕೊಂಡಿಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: ಕೆಎಸ್ಆರ್ಟಿಸಿಗೆ 1 ಕೋಟಿ ರೂ. ದೇಣಿಗೆ ಕೊಟ್ಟ ಕೆಪಿಸಿಸಿ, ಕಾರ್ಮಿಕರ ಕಷ್ಟ ಆಲಿಸಿದ ಕಾಂಗ್ರೆಸ್