ಬೆಂಗಳೂರು: ಇಂದು ಬೆಳಗ್ಗೆಯಿಂದಲೇ ರಾಜ್ಯಸಭೆ ಚುನಾವಣೆಗೆ ವೋಟಿಂಗ್ ಆರಂಭಗೊಂಡಿದ್ದು, ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಇನ್ನು ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡ ಮತದಾನ ಮಾಡುವ ಮೂಲಕ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಬಿಜೆಪಿಗೆ ಶಾಕ್ ನೀಡಿದ್ಧಾರೆ. ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್ ಪಕ್ಷಾಂತರ ಮಾಡುವವರನ್ನು ಜನ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತಾಡಿದ್ದರು. ನಾವು ಪಕ್ಷಕ್ಕೆ ಮೋಸ ಮಾಡಲ್ಲ ಅಂದಿದ್ದರು. ತಾಯಿಗೆ ಮೋಸ ಮಾಡಲ್ಲ ಅಂದಿದ್ದರು. ಆದ್ರೆ, ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಅಂತ ಗೊತ್ತಾಗಿದೆ.
ಇದನ್ನೂ ಓದಿ: ಪಿಕ್ಅಪ್ ಟ್ರಕ್ಗೆ ಜೀಪ್ ಡಿಕ್ಕಿ; 6 ಮಂದಿ ಸಾವು, ಹಲವರು ಗಂಭೀರ
ಈ ರೀತಿ ಪದೇ ಪದೇ ಮೋಸ ಮಾಡುವುದನ್ನು ಜನ ಸಹಿಸಲ್ಲ. ಸೋಮಶೇಖರ್ ಮಂತ್ರಿ ಮಾಡಿ, ಮೈಸೂರು ಉಸ್ತುವಾರಿ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ. ಇಂದು ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ. ಸೋಮಶೇಖರ್ ಅವರೇ ನಿನ್ನೆ ಕರೆ ಮಾಡಿ ದ್ರೋಹ ಬಗೆಯಲ್ಲ ಎಂದು ಹೇಳಿದ್ದರು.
ಜಗದೀಶ್ ಶೆಟ್ಟರ್ ರಾಜೀನಾಮೆ ಕೊಟ್ಟು ಬಿಜೆಪಿ ಬಂದರು. ಇವರೂ ಪಕ್ಷಕ್ಕೆ ರಾಜೀನಾಮೆ ಕೊಟ್ಟು, ಮತ ಹಾಕಬಹುದಿತ್ತು. ವಕೀಲ ವಿವೇಕ್ ರೆಡ್ಡಿ ಅವರ ಜೊತೆ ಚರ್ಚೆ ಮಾಡಿದ್ದೇನೆ. ಅವರು ಏನೆಲ್ಲಾ ಮಾಡಬಹುದು ಎಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.