ಚೆನ್ನೈ: ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ಹೆಗಲ ಮೇಲೆ ಹೊತ್ತು ಸಾಗಿ, ಆಟೋ ಹತ್ತಿಸಿ ಆಸ್ಪತ್ರೆಗೆ ದಾಖಲಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಮೆಚ್ಚುಗೆಯ ಮಹಾಪೂರ ಹರಿದುಬರುತ್ತಿದೆ.
ಈ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಟಿಪಿ ಛತ್ರಂ ಏರಿಯಾದಲ್ಲಿ ನಿನ್ನೆ (ನ.11) ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇನ್ಸ್ಪೆಕ್ಟರ್ ರಾಜೇಶ್ವರಿ ಅವರ ಮಾನವೀಯತೆಗೆ ನೆಟ್ಟಿಗರು ಬಹುಪರಾಕ್ ಹೇಳಿದ್ದಾರೆ. ಫೇಸ್ಬುಕ್, ಟ್ವಿಟರ್, ಯೂಟ್ಯೂಬ್ ಮತ್ತು ಇನ್ಸ್ಟಾಗ್ರಾಂ ಎಲ್ಲೆಲ್ಲೂ ರಾಜೇಶ್ವರಿ ಅವರ ಮನಕಲಕುವ ವಿಡಿಯೋ ನಿನ್ನೆಯಿಂದಲೂ ಹರಿದಾಡುತ್ತಿದ್ದು, ಲೈಕ್ಸ್ ಮತ್ತು ಶೇರ್ ಜತೆ ನೆಟ್ಟಿಗರ ಹೃದಯವನ್ನು ಗೆದ್ದಿದೆ. ವಾಟ್ಸ್ಆ್ಯಪ್ ಸ್ಟೇಟಸ್ಗಳಲ್ಲಿಯೂ ರಾಜೇಶ್ವರಿ ಕಾರ್ಯ ಪ್ರಶಂಸೆಗೆ ಪಾತ್ರವಾಗಿದೆ.
ಗುರುವಾರ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದು ಕೂಡ ವರುಣನ ಅಬ್ಬರ ಮುಂದುವರಿದಿದೆ. ನಿನ್ನೆ ಮಳೆಯ ನಡುವೆ ಟಿಪಿ ಛತ್ರಂ ಏರಿಯಾದಲ್ಲಿರುವ ಸ್ಮಶಾನದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದಿದ್ದ. ಇದೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇನ್ಸ್ಪೆಕ್ಟರ್ ರಾಜೇಶ್ವರಿ ಅವರಿಗೆ ಈ ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಣೆ ಮಾಡಿದ್ದಾರೆ.
ಇನ್ನು ತಮಿಳುನಾಡಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಗ್ಮೋರ್ ಮತ್ತು ಪೆರಂಬೂರ್ ಸೇರಿದಂತೆ ಹಲವು ಕಡೆ ಮರಗಳು ಧರಶಾಹಿಯಾಗಿದ್ದು, ವರುಣನ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ.
ಶನಿವಾರದಿಂದ ಈಚೆಗೆ 12 ಮಂದಿ ಮಳೆ ಕಾರಣದಿಂದಾಗಿ ತಮಿಳುನಾಡಿನಲ್ಲಿ ಮೃತಪಟ್ಟಿರುವುದಾಗಿ ತಮಿಳುನಾಡಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ಜಯಂತ್ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಸಮುದ್ರ ತೀರಕ್ಕೆ ಹೊಂದಿಕೊಂಡಿರುವ ಚೆನ್ನೈನಲ್ಲಿ ವರುಣ ಅಬ್ಬರಿಸುತ್ತಿದ್ದು ನಗರದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. (ಏಜೆನ್ಸೀಸ್)