ಬೆಂಗಳೂರು: ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯಾದ್ಯಂತ ಇಂದು ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ. ಅಲ್ಲದೆ, ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್-19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ, ನೆರವೇರಿಸಲು ಸರ್ಕಾರ ಆದೇಶಿಸಿದೆ. ಇಂದು ನಡೆಯುವ ಶೋಕಾಚರಣೆ ಅವಧಿಯಲ್ಲಿ ಸರ್ಕಾರದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಮತ್ತು ರಾಷ್ಟ್ರಧ್ವಜ ಹಾರಿಸಲ್ಪಡುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿದೆ.
ಮಂಗಳವಾರ ಅವರು ತಮ್ಮ ಬೆಂಗಳೂರಿನ ಮನೆಯಲ್ಲಿದ್ದಾಗ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಾತ್ರೂಮ್ನಲ್ಲಿ ಕುಸಿದುಬಿದ್ದಿದ್ದರು. ಊಟ ಮಾಡಿರಲಿಲ್ಲ. ಬಳಿಕ ತಕ್ಷಣ ಕುಟುಂಬಸ್ಥರು ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರು ಅವರ ಆರೋಗ್ಯ ಸ್ಥಿತಿಯ ಮೇಲೆ ತೀವ್ರ ಗಮನ ಇರಿಸಿ, ಚಿಕಿತ್ಸೆ ನೀಡುತ್ತಿದ್ದರು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು ಇಂದು ರಾತ್ರಿ 11 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಎಂ.ಎಸ್. ರಾಮಯ್ಯ ಆಸ್ಪತ್ರೆಯಿಂದ ಆಂಬ್ಯಲೆನ್ಸ್ ಮೂಲಕ ಎಚ್ಎಎಲ್ ಏರ್ಪೋರ್ಟ್ಗೆ ಪಾರ್ಥಿವ ಶರೀರವನ್ನು ರವಾನಿಸಿ, ಅಲ್ಲಿಂದ ಬೆಳಗಾವಿ ಏರ್ಲಿಫ್ಟ್ ಮಾಡಲಾಗಿದೆ. ಬೆಳಗ್ಗೆ 9ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ತಲುಪಿದ್ದು, 10.30 ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಉಮೇಶ ಕತ್ತಿ ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 2 ಗಂಟೆಯವರೆಗೂ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಳಿಕ ಅಂತಿಮ ಕ್ರಿಯೆಯ ವಿಧಿವಿಧಾನಗಳು ಆರಂಭವಾಗಲಿದ್ದು, ಸಂಜೆ 5 ಗಂಟೆಗೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
‘ಸಾಯೋವರೆಗೂ ಹುಕ್ಕೇರಿಗೆ ನಾನೇ ಎಂಎಲ್ಎ..’ ಎಂದಿದ್ದ ಉಮೇಶ್ ಕತ್ತಿ: ವಿಜಯವಾಣಿಗೆ ನೀಡಿದ್ದ ಕೊನೇ ಸಂದರ್ಶನ..
ಸಚಿವ ಉಮೇಶ್ ಕತ್ತಿ ವಿಧಿವಶ: ಮಾಜಿ ಸಿಎಂ ಬಿಎಸ್ವೈ ಸೇರಿದಂತೆ ರಾಜಕೀಯ ಗಣ್ಯರಿಂದ ಸಂತಾಪ
ಸಚಿವ ಉಮೇಶ್ ಕತ್ತಿ ವಿಧಿವಶ: ಸಂಜೆ 5 ಗಂಟೆ ಹುಟ್ಟೂರಲ್ಲಿ ಅಂತ್ಯಕ್ರಿಯೆ, ಕತ್ತಿ ನೆನೆದು ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ