ಚೆನ್ನೈ: ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಸ್ಮಶಾನದಲ್ಲಿ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಿಸುವ ಮೂಲಕ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಟಿಪಿ ಛತ್ರಂ ಏರಿಯಾದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸ್ಮಶಾನದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸ್ ಅಧಿಕಾರಿ ತಮ್ಮ ಹೆಗಲ ಮೇಲೆ ಹೊತ್ತು ನಿಂತಿರುವುದು ವಿಡಿಯೋದಲ್ಲಿದೆ. ಆಟೋ ಮುಖಾಂತರ ಸರಿಯಾದ ಸಮಯಕ್ಕೆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮರೆದಿದ್ದಾರೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು ಇನ್ಸ್ಪೆಕ್ಟರ್ ರಾಜೇಶ್ವರಿ ಅವರ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಗುರುವಾರ ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ನಡುವೆ ಸ್ಮಶಾನದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದಿದ್ದ. ಇದೇ ಸಮಯದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇನ್ಸ್ಪೆಕ್ಟರ್ ರಾಜೇಶ್ವರಿ ಅವರಿಗೆ ಈ ವಿಚಾರ ತಿಳಿದು ತಕ್ಷಣ ಸ್ಥಳಕ್ಕೆ ಧಾವಿಸಿ ಆತನನ್ನು ರಕ್ಷಣೆ ಮಾಡಿದ್ದಾರೆ.
ಇನ್ನು ತಮಿಳುನಾಡಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಎಗ್ಮೋರ್ ಮತ್ತು ಪೆರಂಬೂರ್ ಸೇರಿದಂತೆ ಹಲವು ಕಡೆ ಮರಗಳು ಧರಶಾಹಿಯಾಗಿದ್ದು, ವರುಣನ ಅಬ್ಬರಕ್ಕೆ ಜನ ತತ್ತರಿಸಿ ಹೋಗಿದ್ದಾರೆ.
ಶನಿವಾರದಿಂದ ಈಚೆಗೆ 12 ಮಂದಿ ಮಳೆ ಕಾರಣದಿಂದಾಗಿ ತಮಿಳುನಾಡಿನಲ್ಲಿ ಮೃತಪಟ್ಟಿರುವುದಾಗಿ ತಮಿಳುನಾಡಿನ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ಜಯಂತ್ ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಅದರಲ್ಲೂ ಸಮುದ್ರ ತೀರಕ್ಕೆ ಹೊಂದಿಕೊಂಡಿರುವ ಚೆನ್ನೈನಲ್ಲಿ ವರುಣ ಅಬ್ಬರಿಸುತ್ತಿದ್ದು ನಗರದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. (ಏಜೆನ್ಸೀಸ್)
ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಲೈಂಗಿಕ ಕಿರುಕುಳ; ಸರ್ಕಾರಿ ಅಧಿಕಾರಿ ಜೈಲಿಗೆ
ಇದರಲ್ಲಿ ಕರ್ನಾಟಕ ಮಾದರಿಯಾಗಲಿ ಎಂದರಂತೆ ಮೋದಿ! ಪ್ರಧಾನಿ ಜತೆಗಿನ ಮಾತುಕತೆ ವಿವರ ಬಿಚ್ಚಿಟ್ಟ ಸಿಎಂ
ನಾಡು ಕಂಡ ಧೀರೆ, ವೀರವನಿತೆ ಓಬವ್ವನ ಜಯಂತಿಗೆ ಪ್ರಧಾನಿಯಿಂದ ಕನ್ನಡದಲ್ಲಿ ಶುಭಾಶಯ