ಶಿವಮೊಗ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಕರ್ತರು ಬುಧವಾರ ಗಾಂಧಿಪಾರ್ಕ್ನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಪ್ರತಿಪಕ್ಷವನ್ನು ಹತ್ತಿಕ್ಕುವ ಸಲುವಾಗಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದೆ. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿದುಕೊಂಡಂತಾಗಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಸಂಸತ್ ಪಾವಿತ್ರ್ಯತೆಯನ್ನೇ ಬಿಜೆಪಿ ಹಾಳು ಮಾಡಿದೆ ಎಂದು ದೂರಿದರು.
ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವುದು ಅತ್ಯಂತ ಕರಾಳ ದಿನಗಳಲ್ಲಿ ಒಂದಾಗಿದೆ. ಕಾಂಗ್ರೆಸ್ ಇದನ್ನು ಒಕ್ಕೊರಲಿನಿಂದ ಖಂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವುದು ತರವಲ್ಲ. ಇದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರದ ಪ್ರತೀಕವಾಗಿದೆ. ಚುನಾವಣೆಯ ಲಾಭ ಪಡೆದುಕೊಳ್ಳುವ ಉದ್ದೇಶವನ್ನು ಬಿಜೆಪಿ ಹೊಂದಿದ್ದು ಆ ಪಕ್ಷವನ್ನು ದೇಶದಿಂದ ದೂರ ಮಾಡುವುದೇ ಕಾಂಗ್ರೆಸ್ ಗುರಿಯಾಗಿದೆ ಎಂದು ಕಿಡಿಕಾರಿದರು.
ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇಕ್ಕೇರಿ ರಮೇಶ್, ಪ್ರಮುಖರಾದ ಎಚ್.ಪಿ.ಗಿರೀಶ್, ಎಸ್.ಪಿ.ಶೇಷಾದ್ರಿ, ರಮೇಶ್ ಶಂಕರಘಟ್ಟ, ಜಿ.ಡಿ.ಮಂಜುನಾಥ್, ಕಲೀಂ ಪಾಶಾ, ಟಿ. ಕೃಷ್ಣಪ್ಪ, ಎಚ್.ಆರ್.ಮಹೇಂದ್ರ, ರಾಘವೇಂದ್ರ, ಡಾ. ಡಿ.ಜಿ.ತಾನಾಜಿ, ಸೌಗಂಧಿಕಾ, ಎನ್.ಡಿ.ಪ್ರವೀಣ್ಕುಮಾರ್, ಸ್ಟೆಲ್ಲಾ ಮಾರ್ಟಿನ್, ನಾಜೀಮಾ, ಪ್ರೇಮಾ, ತಬಸ್ಸುಮ್, ನವೀನ್, ಸಯ್ಯದ್, ಜಮೀರ್, ಅರ್ಚನಾ ಮತ್ತಿತರರು ಪ್ರತಿಭಟನೆಯಲ್ಲಿದ್ದರು.