ನವದೆಹಲಿ: ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳು ಜಾತಿ ಗಣತಿ ನಡೆಸಲು ನಿರ್ಧರಿಸಿದ್ದು, ಇದೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (CWC) ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ರಾಹುಲ್, ಸಭೆಯಲ್ಲಿ ಜಾತಿ ಗಣತಿ ಕುರಿತಾಗಿ ಚರ್ಚಿಸಲಾಗಿದೆ. ಇದು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡಲಿದೆ ಎಂದಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಕೈಗೊಂಡ ನಿರ್ಣಯವು ಐತಿಹಾಸಿಕ ನಿರ್ಧಾರವಾಗಿದ್ದು, ನಮ್ಮ ಪಕ್ಷ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, , ರಾಜಸ್ಥಾನ, ಛತ್ತೀಸ್ಗಢ ಹಾಗೂ ಹಿಮಾಚಲಪ್ರದೇಶದಲ್ಲಿ ಜಾತಿ ಗಣತಿ ನಡೆಸಲು ಅಲ್ಲಿನ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋದಾಮು ದುರಂತ; ಸಿಐಡಿ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ದೇಶದ ಬಡ ಜನರ ವಿಮೋಚನೆಗಾಗಿ ಈ ನಿರ್ಧಾರವು ಅತ್ಯಂತ ಪ್ರಗತಿಪರ ಹೆಜ್ಜೆಯಾಗಿದೆ. ಈ ನಿರ್ಧಾರವು ಜಾತಿ ಅಥವಾ ಧರ್ಮ ಆಧರಿಸಿ ಕೈಗೊಂಡಿಲ್ಲ. ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರಿಗೆ ಅನುಕೂಲವಾಗುವಂತೆ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಇಂಡಿಯಾ ಒಕ್ಕೂಟ ಬೆಂಬಲಿಸುತ್ತದೆ. ಇಂಡಿಯಾ ಒಕ್ಕೂಟದಲ್ಲಿರುವ ಬಹುತೇಕ ಪಕ್ಷಗಳು ಜಾತಿ ಗಣತಿಯ ಪರಿಕಲ್ಪನೆಗೆ ಸಹಮತ ಸೂಚಿಸಿವೆ. ಕೆಲವು ಪಕ್ಷಗಳು ಇದರ ಬಗ್ಗೆ ಚಕಾರ ಎತ್ತಬಹುದು ಆದರೆ, ಕಾಂಗ್ರೆಸ್ಗೆ ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದು CWC ಸಭೆ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.