ದೇವದುರ್ಗ: ರಾಯಚೂರು ಜಿಲ್ಲೆಗೆ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ, ಏಮ್ಸ್ ಹೋರಾಟ ಸಮಿತಿ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಇಲ್ಲಿನ ಮಿನಿವಿಧಾನಸೌಧ ಮುಂದೆ ಪಟ್ಟಣದ ಹೋರಾಟ ಸಮಿತಿ ಸೋಮವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿಗೆ ಸೋಮವಾರ ಮನವಿ ಸಲ್ಲಿಸಿತು.
ಇದನ್ನೂ ಓದಿ: ಏಮ್ಸ್ ಅರ್ಧ ದಿನ ಮುಚ್ಚುವಿಕೆಗೆ ‘ಇಂಡಿಯಾ’ ವಿರೋಧ: ನಿರ್ಧಾರ ವಾಪಸ್..!
ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಂಜೂರು ಮಾಡಬೇಕು ಎಂದು 655ದಿನಗಳಿಂದ ನಡೆಯುತ್ತಿರುವ ಧರಣಿ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಏಮ್ಸ್ ಸಂಸ್ಥೆ ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ನಿರಂತರ ಹೋರಾಟ ಮಾಡುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಕೇಂದ್ರ ಸರ್ಕಾರ ಏಮ್ಸ್ ಸಂಸ್ಥೆ ಮಂಜೂರು ಮಾಡಬೇಕು. ಅದಕ್ಕೆ ಬೇಕಾದ ಅಗತ್ಯ ಸೌಲಭ್ಯವಿದ್ದು ತ್ವರಿತಗತಿಯಲ್ಲಿ ಅನುದಾನ ನೀಡಿ ಈ ಭಾಗದ ಅಭಿವೃದ್ಧಿಗೆ ಮುನ್ನುಡಿ ಬರೆಯಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ನಿರಂತರವಾಗಿ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.