ರಾಯಚೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕಾರ್ಯಕ್ಕೆ ಜನರು ಸಹಕರಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸಹಾಯಕ ಆಯುಕ್ತ ರಜನಿಕಾಂತ್ ಚವ್ಹಾಣ್ ಮನವಿ ಮಾಡಿದರು.
ಸ್ಥಳೀಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಆ.1ರಿಂದ ಆಧಾರ್ ಜೋಡಣೆ ಕಾರ್ಯ ಆರಂಭವಾಗಿದ್ದು, ನಗರದಲ್ಲಿ ಶೇ.46 ಪ್ರಗತಿ ಸಾಧಿಸಲಾಗಿದೆ. ಬಿಎಲ್ಒಗಳು ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಮತದಾರರ ಗುರುತಿನ ಚೀಟಿ ಮತ್ತು ಆಧಾರ ಕಾರ್ಡ್ಗಳನ್ನು ನೀಡಲು ನಿರಾಕರಿಸುತ್ತಿದ್ದಾರೆ. ನಾನೇ ಕೆಲವೊಂದು ಮನೆಗಳಿಗೆ ತೆರಳಿದಾಗ ವಿದ್ಯಾವಂತರು ಕೂಡಾ ಮಾಹಿತಿ ನೀಡಲು ನಿರಾಕರಿಸುತ್ತಿರುವುದು ಕಂಡು ಬರುತ್ತಿದೆ. ಶೀಘ್ರ ನಗರಸಭೆ ಸದಸ್ಯರ ಸಭೆ ಕರೆದು ಅಭಿಯಾನಕ್ಕೆ ಸಹಕರಿಸುವಂತೆ ಮನವಿ ಮಾಡಲಾಗುವುದು. ರಾಜಕೀಯ ಪಕ್ಷಗಳು ಅಭಿಯಾನಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.
ವಿಮಾನ ನಿಲ್ದಾಣಕ್ಕಾಗಿ ಭೂಮಿ ಸ್ವಾಧೀನ ಪ್ರಕ್ರಿಯೆ ನಡೆದಿದ್ದು, ಜಿಲ್ಲಾಧಿಕಾರಿ ರೈತರ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ರೈತರು ಮಾರುಕಟ್ಟೆ ದರ ನೀಡುವಂತೆ ಒತ್ತಾಯ ಮಾಡುತ್ತಿದ್ದು, ನಿಯಮಾವಳಿಯಂತೆ ದರ ನಿಗದಿ ಮಾಡಲಾಗಿದೆ. ಶೀಘ್ರದಲ್ಲಿ ರೈತರ ಮನವೊಲಿಸಿ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ರಜನಿಕಾಂತ ಚವ್ಹಾಣ್ ತಿಳಿಸಿದರು.