ರಾಯಚೂರು: ಕೋಲಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶಗೆ ಮನವಿ ಸಲ್ಲಿಸಿ, ರಮೇಶಕುಮಾರ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ತೀವ್ರ ಖಂಡನೀಯವಾಗಿದ್ದು, ಕೂಡಲೇ ಅವರು ಸಾರ್ವಜನಿಕರವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಕೋಲಾರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಾಜಿ ಸಿಎಂ ಸಿದ್ದರಾಮಯ್ಯ ಜನ್ಮದಿನದ ಅಮೃತ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ರಮೇಶಕುಮಾರ ಮತ್ತು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಬೆಂಬಲಿಗರ ನಡುವೆ ನಡೆದ ಘರ್ಷಣೆ ಚಿತ್ರೀಕರಣ ಮಾಡುತ್ತಿದ್ದ ಪತ್ರಕರ್ತರ ಮೇಲೆ ರಮೇಶಕುಮಾರ ಹಲ್ಲೆ ನಡೆಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ರಮೇಶಕುಮಾರ ಗುಂಡಾವರ್ತನೆ ತೋರಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿದೆ. ಪತ್ರಕರ್ತರ ಮೇಲೆ ಹಲ್ಲೆ ನಿರಂತರವಾಗಿ ನಡೆಯುತ್ತಿದ್ದು, ಸರ್ಕಾರ ವೈದ್ಯರ ರಕ್ಷಣೆಗೆ ತಂದಿರುವ ಕಾಯ್ದೆ ಮಾದರಿಯಲ್ಲಿ ಪತ್ರಕರ್ತರ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.