ರಾಯಚೂರು: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿರ್ಮೂಲನಾ ಕಾಯ್ದೆ ಕಠಿಣವಾಗಿದ್ದು, ಮಕ್ಕಳನ್ನು ಕೆಲಸ ಮಾಡಲು ಬಳಸಿದರೆ ಅಪರಾಧವಾಗಿರುತ್ತದೆ. ಇದರ ನಿರ್ಮೂಲನೆಗೆ ತಂಡಗಳನ್ನು ರಚಿಸಲಾಗಿದ್ದು, ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿಕೊಂಡರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಡಿಸಿ ಡಾ.ಕೆ.ಆರ್.ದುರಗೇಶ ಹೇಳಿದರು.
ನಗರದ ಜಿಲ್ಲಾಧಿಕಾರಿ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಎಸ್ಸಿಪಿ, ಟಿಎಸ್ಪಿ ಉಪಯೋಜನೆಯಡಿಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ನಿರ್ಮೂಲನೆ ಕುರಿತು ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಕ್ಕಳನ್ನು ಕೆಲಸದಲ್ಲಿ ತೊಡಗಿಸಿಕೊಂಡ ಮಾಲಿಕರ ವಿರುದ್ಧ ಎರಡು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗುವುದು. ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಬಾಲ ಕಾರ್ಮಿಕ ಪದ್ಧತ್ನಿ ನಿರ್ಮೂಲನೆ ಮಾಡುವಲ್ಲಿ ಸಾರ್ವಜನಿಕರ ಸಹಕಾರವು ಅಗತ್ಯವಾಗಿರುತ್ತದೆ ಎಂದರು.
ನ್ಯಾಯಾಧೀಶ ಎಂ.ದಯಾನಂದ ಬೇಲೂರೆ ಮಾತನಾಡಿ, ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಅತಿದೊಡ್ಡ ಅಪರಾಧ. ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಿಕೊಡುವುದು ಎಲ್ಲರ ಜವಾಬ್ದಾರಿ. ಮಕ್ಕಳನ್ನು ರಕ್ಷಿಸುವುದು ಹಾಗೂ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವಲ್ಲಿ ಎಲ್ಲರು ಕೈಜೋಡಿಸಬೇಕೆಂದು ತಿಳಿಸಿದರು.
ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಿ.ಜಿ ನಾಗೇಶ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್ ಸೇರಿದಂತೆ ಇತರರಿದ್ದರು.