ರಾಯಚೂರು: ಕೇಂದ್ರ ಸರ್ಕಾರ ಅಡುಗೆ ಅನಿಲ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್ಯುಸಿಐನಿಂದ ಸಿಲಿಂಡರ್ಗಳನ್ನಿಟ್ಟು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಬೆಲೆ ಏರಿಕೆಯಿಂದ ಸಂಕಷ್ಟ ಎದುರಿಸುವಂತಾಗಿದ್ದು, ಕೂಡಲೇ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಮಾಡುತ್ತಾ ಬಂದಿದೆ. ಈಗ ದರ ಸಾವಿರ ರೂ. ಗಡಿದಾಟಿದೆ. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನೂ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಜನರು ತತ್ತರಿಸಿರುವಾಗ ಸಿಲಿಂಡರ್ ದರ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಬೆಲೆ ಏರಿಕೆ ನಿಯಂತ್ರಿಸುವುದಾಗಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರದಲ್ಲಿ ಮತ್ತಷ್ಟು ಬೆಲೆ ಏರಿಕೆಗೆ ಕಾರಣರಾಗಿದ್ದಾರೆ. ಕಾರ್ಪೋರೇಟ್ ಸಂಸ್ಥೆಗಳಿಗೆ ಅನುಕೂಲ ಕಲ್ಪಿಸುತ್ತಿರುವ ಸರ್ಕಾರ ಲಕ್ಷಾಂತರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಬಂಡವಾಳಶಾಹಿ ಪರ ನೀತಿಗಳನ್ನು ಜಾರಿಗೊಳಿಸುತ್ತಿರುವ ಸರ್ಕಾರ ಸಾಮಾನ್ಯ ಜನರ ಸಮಸ್ಯೆಗಳಿಗೆ ಕಿವಿಗೊಡುತ್ತಿಲ್ಲ. ಜನಸಾಮಾನ್ಯರ ಸಮಸ್ಯೆಗಳ ನಿವಾರಿಸುವುದರ ಜತೆಗೆ ಬೆಲೆ ಏರಿಕೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಚನ್ನಬಸವ ಜಾನೇಕಲ್, ಮಹೇಶ ಚೀಕಲಪರ್ವಿ, ಪದಾಧಿಕಾರಿಗಳಾದ ಮಲ್ಲನಗೌಡ, ಕಾರ್ತಿಕ್, ವಿನೋದ್, ಹೇಮಂತ್, ಪೀರ್ಸಾಬ್, ಬಸವರಾಜ ಪಾಲ್ಗೊಂಡಿದ್ದರು.