ರಾಯಚೂರು: ಅಂಗವಿಕಲರು ಸರ್ಕಾರಿ ಮತ್ತು ಸ್ವಯಂ ಉದ್ಯೋಗಗಳಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಡಿಸಿ ಕೆ.ನಿತೀಶ ಹೇಳಿದರು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸಂಘ, ಸಂಸ್ಥೆಗಳು ಹಾಗೂ ಒಕ್ಕೂಟಗಳ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಂಗಳವಾರ ಮಾತನಾಡಿದರು.
ಅಂಗವಿಕಲರು ಸಮಾಜದ ಮುಖ್ಯ ವಾಹಿನಿಗೆ ಬರಲು ಸಾಮಾಜಿಕ ಹಾಗೂ ಆರ್ಥಿಕವಾಗಿ ಸದೃಢರಾಗಬೇಕು. ಅಂಗವಿಕಲರಲ್ಲಿ ನಾಯಕತ್ವ ಬೆಳೆದಾಗ ಸಮಾಜದಲ್ಲಿ ಗೌರವ ಸಿಗುತ್ತದೆ. ವಿದ್ಯಾವಂತ ಅಂಗವಿಕಲರಿಗೆ ಸರ್ಕಾರಿ ಉದ್ಯೋಗದಲ್ಲಿ ಅವಕಾಶಗಳಿಗೆ ಜತೆಗೆ ಸ್ವಯಂ ಉದ್ಯೋಗ ಮಾಡಲು ನಗರದಲ್ಲಿ ತರಬೇತಿ ನೀಡಿ ಸಹಕಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
ನಗರ ಮತ್ತು ಗ್ರಾಮೀಣ ಭಾಗದ ಅಂಗವಿಕಲರು ಸ್ವಯಂ ಉದ್ಯೋಗದ ತರಬೇತಿ ಪಡೆದುಕೊಂಡು ಉದ್ಯೋಗದಲ್ಲಿ ತೊಡಗಬೇಕು, ಇದಕ್ಕಾಗಿ ತರಬೇತಿ, ಸಹಾಯ ಧನ, ಸ್ವಯಂ ಉದ್ಯೋಗದಲ್ಲಿ ಮಾಡಿದ ಉತ್ಪಾದನೆಗಳ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಡಿಡಿ ನವೀನ, ಕೆಪಿಡಿ ಸಂಸ್ಥೆಯ ಅಧ್ಯಕ್ಷ ನಾಗರಾಜ, ನವ ಕರ್ನಾಟಕ ಸಂಘದ ಉಪಾಧ್ಯಕ್ಷ ಎಂ.ಡಿ.ಹುಸೇನ್, ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರದ ಮುಖ್ಯಸ್ಥ ಪವನ ಕಿಶೋರ್ ಪಾಟೀಲ್ ಪ್ರಮುಖರಾದ ಜಾಫರ್, ಶೇಖರಪ್ಪ ಸೇರಿದಂತೆ ಇತರರಿದ್ದರು.