ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಾರ್ಯಾಗಾರ
ರಾಯಚೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ನ್ಯೂಮೋನಿಯ ತಡೆಗಟ್ಟಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತರಬೇತಿ ಕಾರ್ಯಗಾರದ ಮೂಲಕ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಸಾಮಾಜಿಕ ಜಾಗೃತಿ ಮತ್ತು ನ್ಯೂಮೋನಿಯವನ್ನು ಯಶಸ್ವಿಯಾಗಿ ತಟಸ್ಥಗೊಳಿಸುವ ಕ್ರಮಗಳ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
5 ವರ್ಷದೊಳಗಿನ ಮಕ್ಕಳಿಗೆ ನ್ಯೂಮೋನಿಯ ಹಾಗೂ ಡಹೇರಿಯಾ ಮಾರಕವಾಗಿದ್ದು, ಜಿಲ್ಲೆಯಲ್ಲಿ ಪ್ರತಿ ವರ್ಷ ಶೇ.20 ಮಕ್ಕಳು ಈ ಕಾಯಿಲೆಗಳಿಂದ ಮೃತಪಡುತ್ತಿದ್ದಾರೆ. ಆದ್ದರಿಂದ ಈ ಕಾಯಿಲೆಗಳನ್ನು ತಡೆಗಟ್ಟಲು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಕರ್ನಾಟಕ ಆಯುಷ್ಮಾನ ಭಾರತ ಯೋಜನೆ ಮಾಹಿತಿಯನ್ನು ಜನರಲ್ಲಿ ತಲುಪಿಸಿದರೆ ಜನರಲ್ಲಿ ಚಿಕಿತ್ಸೆಗೆ ಸಂಬಂಧಿಸಿದ ಆರ್ಥಿಕ ಭಯ ದೂರವಾಗಲಿದೆ ಎಂದರು.
ಕಾಯಕಲ್ಪ ಯೋಜನೆಯಡಿ ಮೂಲ ಸೌಕರ್ಯಗಳನ್ನೊಳಗೊಂಡ ವೈದ್ಯಕೀಯ ಸಂಸ್ಥೆಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತಿದ್ದು, ಮುಂದಿನ 6 ತಿಂಗಳೊಳಗಾಗಿ ಜಿಲ್ಲೆಯ ಎಲ್ಲ ವೈದ್ಯಕೀಯ ಸಂಸ್ಥೆಗಳಿಗೆ ಕಾಯಕಲ್ಪ ಪ್ರಮಾಣ ಪತ್ರ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.