ರಾಯಚೂರು: ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ ವಿತರಣೆಗೆ ವಿರೋಧಿಸುತ್ತಿರುವ ಸ್ವಾಮೀಜಿಗಳ ಹೇಳಿಕೆಯನ್ನು ಖಂಡಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಎಸ್ಎಫ್ಐ ಶನಿವಾರ ಪ್ರತಿಭಟನೆ ನಡೆಸಿತು.
ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ವಿತರಿಸಲಾಗುತ್ತಿದೆ. ಆದರೆ ಕೆಲವರು ಅದನ್ನು ವಿರೋಧಿಸಿ ಮೊಟ್ಟೆ ವಿತರಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.
ಮಕ್ಕಳಿಗೆ ವಾರದಲ್ಲಿ ಮೂರು ದಿನ ಮೊಟ್ಟೆ ಮತ್ತು ಬಾಳೆಹಣ್ಣು ವಿತರಣೆ ಮಾಡುತ್ತಿರುವುದಕ್ಕೆ ಕೆಲವು ಸ್ವಾಮೀಜಿಗಳು ಧಾರ್ಮಿಕತೆ ಹೆಸರಿನಲ್ಲಿ ವಿರೋಧ ಮಾಡುವ ಮೂಲಕ ಆದೇಶವನ್ನು ಹಿಂಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ.
ಸಾರ್ವಜನಿಕ ಶಿಕ್ಷಣ ಇಲಾಖೆ ಸಮೀಕ್ಷೆಯಂತೆ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಣೆಗೆ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ ಸೂಕ್ತ ಎಂದು ತಿಳಿಸಲಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮಕ್ಕಳಲ್ಲಿ ಹೆಚ್ಚಿನ ಅಪೌಷ್ಟಿಕತೆ ಕಂಡು ಬಂದಿದ್ದು, ಪೌಷ್ಟಿಕ ಆಹಾರವಾದ ಮೊಟ್ಟೆ ವಿತರಣೆ ನಿರ್ಧಾರ ಸೂಕ್ತವಾಗಿದೆ. ಜಾತಿ, ಧರ್ಮದ ಹೆಸರಿನಲ್ಲಿ ಮೊಟ್ಟೆ ವಿತರಣೆಯನ್ನು ವಿರೋಧಿಸುತ್ತಿರುವ ಸ್ವಾಮೀಜಿಗಳು ಅಪೌಷ್ಟಿಕತೆ ನಿವಾರಣೆಗೆ ಶ್ರಮಿಸಲು ಮುಂದಾಗಬೇಕು. ಸಮಾಜದಲ್ಲಿನ ತಾರತಮ್ಯ ನಿವಾರಣೆಗೆ ಗಮನ ಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.