ರಾಯಚೂರು : ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಭತ್ತ ಮುಂತಾದ ಬೆಳೆಗಳು ಹಾನಿಗೊಳಗಾಗಿರುವ ಕುರಿತು ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿ, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಫಸಲ್ ಭಿಮಾ ಯೋಜನೆಯಡಿ ಹಾನಿಗೊಳಗಾದ ರೈತರಿಗೆ ಪರಿಹಾರ ಕೊಡಿಸಲಾಗುವುದು ಎಂದರು.
ಸರ್ಕಾರ ಕೃಷಿ ಚಟುವಟಿಕೆ ಹಾಗೂ ಕೃಷಿ ಉತ್ಪನ್ನಗಳ ಸಾಗಣೆಗೆ ನಿರ್ಬಂಧ ಮಾಡದಂತೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕೃಷಿ ಯಂತ್ರೋಪಕರಣಗಳ ಬಿಡಿಭಾಗಗಳ ಅಂಗಡಿಗಳನ್ನು ತೆರೆಯಬೇಕು. ರೈತರಿಗೆ ಡಿಸೇಲ್ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಹಣ್ಣು, ತರಕಾರಿ ಮಾರಾಟಕ್ಕಾಗಿ ಬೆಂಗಳೂರಿನಲ್ಲಿ ಹಾಪ್ಕಾಪ್ಸ್ನಿಂದ ದುಪ್ಪಟ್ಟು ಮಳಿಗೆಗಳನ್ನು ತೆರೆದು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲೂ ತೋಟಗಾರಿಕೆ ಇಲಾಖೆಯಿಂದ ಮಳಿಗೆಗಳನ್ನು ತೆರೆದು ಹಣ್ಣು, ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡುವಂತೆ ನಿರ್ದೇಶನ ನೀಡಲಾಗಿದೆ ಎಂದರು.