ಶೆಟಲ್ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ
ರಾಯಚೂರು: ಹಲವು ವರ್ಷಗಳಿಂದ ಕುಂಟುತ್ತಾ ಸಾಗಿರುವ ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗೆ ಮುಕ್ತಿ ಕಾಣಿಸಲು ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಧಿಕಾರಿ ಅಗತ್ಯ ಕ್ರಮಕೈಗೊಳ್ಳಬೇಕು. ಅದಕ್ಕೆ ಬೇಕಾದ ಸಹಕಾರವನ್ನು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.
ಸ್ಥಳೀಯ ಮಹಾತ್ಮಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿನ ಭಾನುವಾರ ಶೆಟಲ್ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟಿಸಿ ಮಾತನಾಡಿರು. ಸುಸಜ್ಜಿತ ಶೆಟಲ್ ಬ್ಯಾಡ್ಮಿಂಟನ್ನ ಆರು ಕೋರ್ಟ್ಗಳಿರುವ ಕ್ರೀಡಾಂಗಣವನ್ನು ನಿರ್ಮಾಣ ಮಾಡಿರುವುದು ಸಂತೋಷಕರ. ಇದರ ಸದುಪಯೋಗವಾಗಬೇಕು. ಪ್ರತಿಭಾವಂತ ಕ್ರೀಡಾಪಟುಗಳ ಕುಟುಂಬಗಳಿಗೆ ಮಾನಸಿಕ ಶಕ್ತಿ ತುಂಬುವ ಕೆಲಸ ಮಾಡಬೇಕಾಗಿದೆ. ಇದರಿಂದ ಪ್ರತಿಭೆಯಿದ್ದರೂ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗದಂತಹ ಕ್ರೀಡಾಪಟುಗಳು ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಲು ಸಾಧ್ಯವಾಗಲಿದೆ ಎಂದರು.
ನಗರದ ಬೆಳವಣಿಗೆ ನಿಟ್ಟಿನಲ್ಲಿ ಜನರಿಗೆ ಮೂಲ ಸೌಕರ್ಯ ಕಲ್ಪಿಸುವುದು ಅತ್ಯಗತ್ಯವಾಗಿದೆ. ಸೌಕರ್ಯಗಳಿದ್ದಾಗ ಜನರು ಮಹಾನಗರಗಳಿಗೆ ಹೋಗುವುದು ತಪ್ಪಲಿದೆ. ರಾಜ್ಯಕ್ಕೆ ವಿದ್ಯುತ್ ನೀಡುವ ಜಿಲ್ಲೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕಾಗಿದೆ ಎಂದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಹಿಂದೆ 1.50 ಕೋಟಿ ರೂ. ಅಂದಾಜು ಪಟ್ಟಿ ತಯಾರಿಸಲಾಗಿತ್ತು. ಈಗ ಅದು 3.20 ಕೋಟಿ ರೂ.ಗೆ ತಲುಪಿದೆ. ಆದರೂ ಹಲವಾರು ಕೆಲಸಗಳು ಬಾಕಿಯಿವೆ. ಅದಕ್ಕೆ ಅನುದಾನ ಬೇಕಾಗಿದೆ. ಮುಂದಿನ ಬಜೆಟ್ನಲ್ಲಿ ಕ್ರೀಡಾಂಗಣಕ್ಕೆ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದರು.
ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಜಿಲ್ಲೆಯ ಉಸ್ತುವಾರಿ ಸಚಿವರು ಆರು ತಿಂಗಳಲ್ಲಿಯೇ ಬದಲಾಗುತ್ತಿರುವುದರಿಂದ ನಿರೀಕ್ಷಿತ ಮಟ್ಟದಲ್ಲಿ ಕೆಲಸಗಳು ನಡೆಯದಂತಾಗಿದೆ. ಕ್ರಿಯಾಶೀಲರಾಗಿರುವ ವಿ.ಸೋಮಣ್ಣ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ವಿಮಾನ ನಿಲ್ದಾಣ ಮತ್ತು ನೂತನ ರಾಯಚೂರು ವಿವಿಗೆ ತಲಾ 50 ಕೋಟಿ ರೂ. ಬಜೆಟ್ನಲ್ಲಿ ಮಂಜೂರು ಮಾಡಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಹಿರಿಯ ಕ್ರೀಡಾಪಟುಗಳನ್ನು ಸನ್ಮಾನಿಸಿಲಾಯಿತು. ಶಾಸಕ ರಾಜಾ ವೆಂಕಟಪ್ಪ ನಾಯಕ, ಡಿಸಿ ಡಾ.ಬಿ.ಸಿ.ಸತೀಶ, ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಪಿ ಪ್ರಕಾಶ ನಿಕಮ್, ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಲೋಕೋಪಯೋಗಿ ಇಲಾಖೆ ಇಇ ಚನ್ನಬಸಪ್ಪ ಮೆಕಾಲೆ ಇದ್ದರು.