ರಾಯಚೂರು: ಹೊಸ ಪಿಂಚಣಿ ಯೋಜನೆ ಹಿಂಪಡೆದು ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದಿಂದ ಹಮ್ಮಿಕೊಂಡಿರುವ ಸಂಕಲ್ಪ ಯಾತ್ರೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಮಂಗಳವಾರ ಸಂಜೆ ಅದ್ದೂರಿಯಾಗಿ ಬರಮಾಡಿಕೊಂಡರು.
ನಗರದ ಕೃಷಿ ವಿಜ್ಞಾನಗಳ ವಿವಿ ಮುಂಭಾಗದಲ್ಲಿ ಯಾತ್ರೆಯನ್ನು ಬರಮಾಡಿಕೊಂಡು ಬೈಕ್ ರ್ಯಾಲಿ ಮೂಲಕ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸಿ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಎನ್ಪಿಎಸ್ ಹಿಂಪಡೆಯುವಂತೆ ನೌಕರರು ಘೋಷಣೆ ಕೂಗಿದರು.
ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಮಾತನಾಡಿ, ಎನ್ಪಿಎಸ್ ರದ್ದುಗೊಳಿಸುವಂತೆ ಹಲವು ಹೋರಾಟ ಹಮ್ಮಿಕೊಂಡರೂ ಸರ್ಕಾರ ಯೋಜನೆಯಲ್ಲಿ ಅಲ್ಪ ಬದಲಾವಣೆ ಮಾಡಿದೆಯೇ ಹೊರತು ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುತ್ತಿಲ್ಲ.
ಡಿ.19ರಂದು ಫ್ರೀಡಂ ಪಾರ್ಕ್ನಲ್ಲಿ ಮಾಡು ಇಲ್ಲವೇ ಮಡಿ ಹೋರಾಟ ಹಮ್ಮಿಕೊಂಡಿದ್ದು, ಈ ನಿಟ್ಟಿನಲ್ಲಿ ನೌಕರರಲ್ಲಿ ಜಾಗೃತಿ ಮೂಡಿಸಲು ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಎಲ್ಲ ನೌಕರರು ಕೈಜೋಡಿಸಬೇಕು ಎಂದು ಹೇಳಿದರು.