ರಾಯಚೂರು: ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದರಿಂದ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ. ಬಿಜೆಪಿಯ ಭ್ರಷ್ಟಾಚಾರ, ಹಿಂದುತ್ವ ಅಜೆಂಡಾದಿಂದಾಗಿ ಜನರು ಭಾಜಪ ತಿರಸ್ಕರಿ ಕಾಂಗ್ರೆಸ್ ಅಧಿಕಾರಕ್ಕೆ ತಂದಿದ್ದಾರೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಕೋಮುವಾದಿ ಬಿಜೆಪಿ ಸೋಲಿಸುವಂತೆ ಎದ್ದೇಳು ಕರ್ನಾಟಕ ಅಭಿಯಾನ ನಡೆಸಿದ್ದು, ಬಿಜೆಪಿ ಸೋಲಿಗೆ ಕಾರಣವಾಗಿದ್ದು, ಕಾಂಗ್ರೆಸ್ ಜನತೆಗೆ ನೀಡಿದ ಭರವಸೆ ಈಡೇರಿಸಬೇಕಾಗಿದೆ ಎಂದರು.
ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಎದ್ದೇಳು ಕರ್ನಾಟಕ ಅಭಿಯಾನ ನಡೆಸಲಾಯಿತು. ರೈತ, ಕಾರ್ಮಿಕರು, ಯುವಜನರು ನಡೆಸಿದ ಅಭಿಯಾನ ಪರಿಣಾಮದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ದೇಶದಲ್ಲಿ ಎದ್ದೇಳು ಭಾರತ ಅಭಿಯಾನ ನಡೆಸಲು ಚಿಂತನ ನಡೆದಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಮುಂದೆ ಅನೇಕ ಸವಾಲುಗಳಿದ್ದು, ಪ್ರತಿ ಇಲಾಖೆಯಲ್ಲಿ ಭ್ರಷ್ಟಚಾರ ಮೀತಿ ಮೀರಿದೆ. ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಲಾನುಭವಿಗಳಿಗೆ ತಲುಪಿಸಲು ಮುಂದಾಗಬೇಕಿದೆ. ಅನೇಕ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಭರ್ತಿಗೆ ಸರ್ಕಾರ ಮುಂದಾಗಬೇಕು ಎಂದರು.
ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ; ಪತ್ರದಲ್ಲಿ ಕುಡಿಯುವ ನೀರಿನ ಬೇಡಿಕೆ…
ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಹಲವಾರು ತಿಂಗಳುಗಳಿಂದ ಹೋರಾಟ ನಡೆದಿದೆ. ಪ್ರತಿಭಟನಾ ಸ್ಥಳಕ್ಕೆ ಇಂದಿನ ಡಿಸಿಎಂ ಡಿಕೆ ಶಿವಕುಮಾರ ಕೂಡ ಭೇಟಿ ನೀಡಿ ಬೆಂಬಲಿಸಿದ್ದು, ಆದಷ್ಟು ಬೇಗನೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡು ಜಿಲ್ಲೆಯ ಏಕೈಕ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಮೂಲಕ ಏಮ್ಸ್ ಸ್ಥಾಪನೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಕಳೆದ 15 ವರ್ಷಗಳಿಂದ ಜಿಲ್ಲೆ ಮಂತ್ರಿ ಸ್ಥಾನದಿಂದ ವಂಚಿತವಾಗಿತ್ತು. ಪ್ರಸ್ತುತ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರುವುದು ಸ್ವಾಗತಾರ್ಹ. ರಾಜ್ಯ ಮತ್ತು ಜಿಲ್ಲೆಯ ರೈತರ ಸಮಸ್ಯೆ ಕುರಿತು ಚರ್ಚಿಸಲು ಶೀಘ್ರವೇ ರೈತ ಸಂಘದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪರಿಹರಿಸಲು ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ನಿಗದಿತ ದರಕಿಂತ ಹೆಚ್ಚಿನ ದರಕ್ಕೆ ಹತ್ತಿ ಮತ್ತು ಮೆಣಸಿನಕಾಯಿ ಬಿತ್ತನೆ ಬೀಜ ಮಾರಾಟ ಮಾಡುತ್ತಿದ್ದು, ಕೃಷಿ ಇಲಾಖೆ ಅಕ್ರಮಕ್ಕೆ ಕಡಿವಾಣ ಹಾಕಬೇಕಾಗಿದೆ. 450 ಗ್ರಾಂ ಹತ್ತಿ ಬೀಜದ ಪ್ಯಾಕೆಟ್ಗೆ 700 ರೂ. ದರವಿದ್ದು, ರೈತರಿಗೆ 2 ರಿಂದ 3 ಸಾವಿರ ರೂ.ಗೆ ಮಾರಾಟ ಮಾಡಿ ವಂಚನೆ ಮಾಡಲಾಗುತ್ತಿದೆ ಎಂದು ಚಾಮರಸ ಮಾಲಿಪಾಟೀಲ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಪದಾಧಿಕಾರಿಗಳಾದ ಬೂದಯ್ಯಸ್ವಾಮಿ ಗಬ್ಬೂರು, ಲಿಂಗಾರೆಡ್ಡಿ, ದೇವರಾಜ ನಾಯಕ, ಹುಚ್ಚಪೀರ, ಬಾಲಚಂದ್ರ, ಮಲ್ಲಣ್ಣ ಗೌಡೂರು, ಹಾಜಿ ಮಸ್ತಾನ್ ಉಪಸ್ಥಿತರಿದ್ದರು.