ರಾಯಚೂರು: ಜಿಲ್ಲೆಯಲ್ಲಿನ ಮುರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಹಾಗೂ ಇತರ ವಿವಿಧ ವಸತಿ ಶಾಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ ಸೂಚನೆ ನೀಡಿದರು.
ವಸತಿ ಶಾಲೆ ಸಿಬ್ಬಂದಿಗೆ ವೇತನ, ಸಾಮಾಜಿಕ ಭದ್ರತೆ ಮತ್ತು ಸೌಲಭ್ಯ ಒದಗಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು. ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ವೇತನ, ಇಎಸ್ಐ, ಇಪಿಎಫ್ ಸೌಲಭ್ಯ ನೀಡಬೇಕು. ಪ್ರತಿ ತಿಂಗಳು ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಬೇಕು. ಸರ್ಕಾರದ ಸುತ್ತೋಲೆಯಂತೆ ಕಾರ್ಮಿಕರು, ಸಿಬ್ಬಂದಿಗೆ ರಜೆ ನೀಡಬೇಕು. ವೇತನ ಬಾಕಿಯಿದ್ದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದ, ಶೌಚಗೃಹ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು.