ರಾಯಚೂರು: ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ನಗರದಲ್ಲಿ ಜವಳಿ ಪಾರ್ಕ್ ನಿರ್ಮಾಣವಾದರೆ ನಿರುದ್ಯೋಗ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಜವಳಿ ಪಾರ್ಕ್ನಿಂದ ಹತ್ತಿ ಬೆಳೆಗಾರರು ಹಾಗೂ ಕಾಟನ್ ಮಿಲ್ಗಳಿಗೂ ಬಹಳ ಅನುಕೂಲವಾಗಲಿದೆ ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು.
ಸ್ಥಳೀಯ ಗಂಜ್ ಕಲ್ಯಾಣ ಮಂಟಪದಲ್ಲಿ ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ನಿಂದ ಶನಿವಾರ ವಿವಿಧ ಕ್ಷೇತ್ರದವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಹತ್ತಿ ಬೆಳೆಯಲಾಗುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಾಗುವುದು ಅತ್ಯವಶ್ಯ. ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಯಾಗುವುದರಿಂದ 25 ಸಾವಿರ ಜನರಿಗೆ ಉದ್ಯೋಗ ಸಿಗಲಿದೆ. ಜಿಲ್ಲೆಯ ಅಭಿವೃದ್ಧಿಯೂ ಸಾಧ್ಯವಾಗಲಿದೆ ಎಂದು ಪಾಪಾರೆಡ್ಡಿ ತಿಳಿಸಿದರು.
ಕಾಟನ್ ಮಿಲ್ಲರ್ಸ್ ಸಂಘದ ಅಧ್ಯಕ್ಷ ವಿ.ಲಕ್ಷ್ಮೀರೆಡ್ಡಿ ಮಾತನಾಡಿ, ದೇಶದಲ್ಲಿ ಏಳು ಮೆಗಾ ಟೆಕ್ಸ್ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡಿದ್ದು, ರಾಯಚೂರು ಜಿಲ್ಲೆಯಲ್ಲಿ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿರುವುದು ಸಂತಸದ ವಿಚಾರ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ಉಪಾಧ್ಯಕ್ಷೆ ನರಸಮ್ಮ ಮಾಡಗಿರಿ, ವಾಣಿಜ್ಯೋದ್ಯಮ ಸಂಘದ ಜಿಲ್ಲಾಧ್ಯಕ್ಷ ತ್ರಿವಿಕ್ರಮ ಜೋಷಿ, ಎಪಿಎಂಸಿ ಅಧ್ಯಕ್ಷ ಅಚ್ಚುತರೆಡ್ಡಿ, ಉಪಾಧ್ಯಕ್ಷ ಬಂಗಿ ನರಸರೆಡ್ಡಿ ಇತರರಿದ್ದರು.