ರಾಯಚೂರು: ಜಿಲ್ಲೆಯಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಬಗರ್ ಹುಕುಂ ಸಾಗುವಳಿದಾರರಿಗೆ ಕಾಲಮಿತಿಯೊಳಗೆ ಭೂ ಮಂಜೂರಾತಿ ನೀಡಲು ಕ್ರಮವಹಿಸಬೇಕು ಎಂದು ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಭೂಮಿ ವಸತಿ ಹೋರಾಟ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಬಾರದು. ಭೂಮಿ, ವಸತಿ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಸಭೆ ತೀರ್ಮಾನಗಳನ್ನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ರಾಯಚೂರು ತಾಲೂಕಿನ ಕುರುಬದೊಡ್ಡಿ ಗ್ರಾಮದ 97ಎಕರೆ ಸರ್ಕಾರಿ ಭೂಮಿಯಲ್ಲಿ ಾರಂ ನಂಬರ್ 50 ಮತ್ತು 53ರ ಪ್ರಕಾರ ಅರ್ಜಿ ಸಲ್ಲಿಸಿದ್ದು, ಕಂದಾಯ ತೆರಿಗೆ ಕಟ್ಟುತ್ತಾ ಬಂದಿರುವ ರೈತರಿಗೆ ಪಟ್ಟಾ ನೀಡಬೇಕು. ಗಾಣಧಾಳ ಗ್ರಾಮದ ಸರ್ಕಾರಿ ಭೂಮಿಯಲ್ಲಿ 15 ಕುಟುಂಬಗಳು 40 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಅವರಿಗೆ ಪಟ್ಟಾ ವಿತರಣೆ ಮಾಡಬೇಕು.
ಯರಗೇರಾ ಹೋಬಳಿಯ ಗುಂಜಳ್ಳಿ ಗ್ರಾಮದ ಸಾಗುವಳಿ ಚೀಟಿ ಕೊಟ್ಟಿದ್ದರೂ ಪಹಣಿಯಲ್ಲಿ ಹೆಸರು ದಾಖಲಾಗಿಲ್ಲ. ಕಚೇರಿಗೆ ಅಲೆದಾಡುತ್ತಿದ್ದಾರೆ ಇವರಿಗೆ ಪಹಣಿಯಲ್ಲಿ ಹೆಸರು ನಮೂದಿಸಬೇಕು. ಜೇಗರಕಲ್ ಮಲ್ಲಾಪುರ ಗ್ರಾಮದಲ್ಲಿನ ಕುಟುಂಬಗಳಿಗೆ ಪಟ್ಟಾ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.