ರಾಯಚೂರು: ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾನುಸಾರ ನೀಡಿರುವ ಕಾಂತರಾಜು ಆಯೋಗದ ವರದಿಯು ಅವೈಜ್ಞಾನಿಕವಾಗಿದ್ದು, ಕೂಡಲೇ ರಾಜ್ಯ ಸರ್ಕಾರ ಹೊಸದಾಗಿ ವೈಜ್ಞಾನಿಕ ಮತ್ತು ಸಾಂವಿಧಾನಿಕವಾಗಿ ಸಮೀಕ್ಷೆ ನಡೆಸುವ ಅಗತ್ಯತೆ ಇದೆ ಎಂದು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಚಂದ್ರೇಖರ ಪಾಟೀಲ್ ಮಿರ್ಜಾಪುರ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿ, ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭೆಯು ಬಸವವಾದಿ ತತ್ವಗಳನ್ನು ಪ್ರತಿಪಾದಿಸುತ್ತಾ ಬಂದಿದ್ದು, ಜಾತಿಗಣತಿಗೆ ವೀರಶೈವ, ಲಿಂಗಾಯತ ಮಹಾಸಭಾದಿಂದ ಯಾವುದೇ ವಿರೋಧವಿಲ್ಲ. ಆದರೆ ಹತ್ತು ವರ್ಷಗಳ ಹಿಂದೆ ನಡೆಸಲಾದ ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯು ಸರಿಯಿಲ್ಲ. ಎಂದು ಆರೊಪಿಸಿದರು.
ಸಮೀಕ್ಷೆಯ ವೇಳೆ ರಾಜ್ಯ ಒಬಿಸಿ ಪಟ್ಟಿಯಲ್ಲಿ ವಿವಿಧ ವರ್ಗಗಳ ಅಡಿಯಲ್ಲಿ ಬರುವ ಉಪಪಂಗಡಗಳ ಜತೆಗೆ ಲಿಂಗಾಯತ ಪದವನ್ನು ಬಳಸದೇ ಕೇವಲ ಉಪಪಂಗಡದ ಹೆಸರನ್ನು ಮಾತ್ರ ನಮೂದಿಸಲಾಗಿದೆ. ಇದರಿಂದ ಮುಂದಿನ ಪೀಳಿಗೆಗೆ ಅನ್ಯಾಯವಾಗುವುದಲ್ಲದೇ, ಸೌಲಭ್ಯಗಳಿಂದ ವಂಚಿತರಾಗುತ್ತಾರೆ ಎಂದರು.
ವೀರಶೈವ, ಲಿಂಗಾಯತ ಎಲ್ಲ ಉಪ ಪಂಗಡಗಳು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು. ಕಾಂತರಾಜು ವರದಿಯನ್ನು ಮತ್ತೊಮ್ಮೆ ಹೊಸದಾಗಿ ಸಮೀಕ್ಷೆ ನಡೆಸಿ ವೈಜ್ಞಾನಿಕ ವರದಿಯನ್ನು ಸಿದ್ಧಪಟಿಸಬೇಕು. ಒಂದು ವೇಳೆ ಈ ವಿಚಾರದಲ್ಲಿ ಸರ್ಕಾರ ನಿರ್ಲಕ್ಷೃ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ಸಮಾಜದಿಂದಲೇ ಸಮೀಕ್ಷೆ ನಡೆಸಿ ವರದಿಯನ್ನು ಸಿದ್ಧಪಡಿಸಿ ಬಿಡುಗಡೆ ಮಾಡುವುದಲ್ಲದೇ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾಸಭಾದ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಭೀಮರೆಡ್ಡಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಸೋಮನಾಥರೆಡ್ಡಿ, ಚನ್ನಬಸವ ಮಿರ್ಜಾಪುರ, ಪ್ರಮುಖರಾದ ನೀಲಕಂಠ, ಪರಮೇಶ್ವರ ಸಾಲಿಮಠ ಸೇರಿದಂತೆ ಇತರರಿದ್ದರು.