ರಾಯಚೂರು: ಯುವ ಜನರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಸ್ಥಳೀಯ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ತಳ್ಳುಬಂಡಿಯಲ್ಲಿ ಹಣ್ಣು, ಹೂವು ಮಾರಾಟ ಮಾಡುವ ಮೂಲಕ ಶನಿವಾರ ಪ್ರತಿಭಟನೆ ನಡೆಸಲಾಯಿತು. ಅಧಿಕಾರಕ್ಕೆ ಬರುವ ಮುಂಚೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದ ಪ್ರಧಾನಿ, ಏಳು ವರ್ಷಗಳಲ್ಲಿ ಉದ್ಯೋಗ ನೀಡದೆ ಅನ್ಯಾಯ ಮಾಡಿದ್ದಾರೆ. ಯುವಜನರಿಗೆ ಸುಳ್ಳು ಭರವಸೆ ನೀಡುವ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ, ಉದ್ಯೋಗ ನೀಡುವುದನ್ನು ಬಿಟ್ಟು ಕೋಮುಭಾವನೆಗಳನ್ನು ತುಂಬಿ ಅವರನ್ನು ದಾರಿ ತಪ್ಪಿಸುತ್ತಿದೆ. ಯುವಕರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಯೋಜನೆಗಳನ್ನು ರೂಪಿಸದೆ, ಸರ್ಕಾರವನ್ನು ಪ್ರಶ್ನೆ ಮಾಡುವ ಯುವಜನರ ವಿರುದ್ಧ ಪ್ರಕರಣ ದಾಖಲಿಸುತ್ತಿದೆ ಎಂದು ದೂರಿದರು.