ಕೊಪ್ಪಳ: ಮಳೆಗಾಲ ಆರಂಭವಾಗಲಿದ್ದು ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಚರಂಡಿ ಸ್ವಚ್ಛತೆಗೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಕೆಎಸ್-1 ಹಾಲ್ನಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು. ಕಾಲುವೆ, ಚರಂಡಿಗಳಲ್ಲಿ ಹೂಳು ತೆರವು ಮಾಡಿ. ಇಲ್ಲದಿದ್ದಲ್ಲಿ ನೀರು ಅಕ್ಕ-ಪಕ್ಕ ಹರಿದು ಹಾನಿಯಾಗಲಿದೆ.
ಚರಂಡಿಗಳನ್ನು ಕೂಡಲೇ ಸ್ವಚ್ಛಗೊಳಿಸಿ
ಎಲ್ಲ ನಗರ, ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿನ ಕಾಲುವೆ, ಚರಂಡಿಗಳನ್ನು ಕೂಡಲೇ ಸ್ವಚ್ಛಗೊಳಿಸಿ. ಜೆಸಿಬಿ ಹಾಗೂ ನೌಕರರನ್ನು ಬಳಸಿ ಯುದ್ಧೋಪಾದಿಯಲ್ಲಿ ಕೆಲಸ ಮಾಡಿ. ಆಯಾ ವಾರ್ಡ್ ಸದಸ್ಯರು, ಸಂಸ್ಥೆ ಅಧ್ಯಕ್ಷರ ಸಹಕಾರ ಪಡೆಯಿರಿ.
ಜನವಸತಿ ಪ್ರದೇಶದಲ್ಲಿ ಒಂದೆಡೆ ನೀರು ನಿಲ್ಲದಂತೆ ನೋಡಿಕೊಳ್ಳಿ. ಈ ಬಗ್ಗೆ ಜನರಿಗೂ ಅರಿವು ಮೂಡಿಸಿ. ನೀರು ನಿಂತಲ್ಲಿ ಸೊಳ್ಳೆಗಳು ಹೆಚ್ಚಿ ವಿವಿಧ ರೋಗ ಹರಡುವ ಸಾಧ್ಯತೆ ಇದೆ. ವೇಳಾ ಪಟ್ಟಿ ರಚಿಸಿಕೊಂಡು ಕೆಲಸ ಮುಗಿಸಿ. ಯಾವುದೇ ಕಾರಣಕ್ಕೂ ವಿಳಂಬ ಮಾಡುವಂತಿಲ್ಲ.
ಇದನ್ನೂ ಓದಿ: ಮಳೆಗಾಲಕ್ಕೆ ಭರದ ಸಿದ್ಧತೆ
ಹಾನಿಯಾದಾಗ ಓಡಾಡುವ ಬದಲು ಈಗಲೇ ಮುನ್ನೆಚ್ಚರಿಕೆವಹಿಸಿ. ಈ ಬಗ್ಗೆ ಗ್ರಾಪಂ ಪಿಡಿಒ, ನಗರ, ಸ್ಥಳೀಯ ಸಂಸ್ಥೆಗಳು ಮುಖ್ಯಾಧಿಕಾರಿಗಳಿಗೆ ತಕ್ಷಣ ಸೂಚನೆ ನೀಡುವಂತೆ ತಾಕೀತು ಮಾಡಿದರು.
ವ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನಿಗೆ ವ್ಯವಸ್ಥೆ
ಕೃಷಿ ಚಟುವಟಿಕೆ ಆರಂಭವಾಗಲಿದ್ದು, ತಾಲೂಕು ಮಟ್ಟದಲ್ಲಿ ಸಭೆ ನಡೆಸಿ. ಕೃಷಿ ಸಹಾಯಕ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆಯಾ ತಾಲೂಕುಗಳಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನಿಗೆ ವ್ಯವಸ್ಥೆ ಮಾಡಿ. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ರೈತರೊಂದಿಗೆ ತಾಳ್ಮೆಯಿಂದ ವರ್ತಿಸಿ. ಎಲ್ಲಿಯೂ ಗಲಾಟೆಯಾಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.
ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ತೆರವಾಗಿದ್ದು, ಎಲ್ಲ ಇಲಾಖೆಗಳು ಕಾಮಗಾರಿ ಆರಂಭಿಸಿ. ಟೆಂಡರ್ ಪ್ರಕ್ರಿಯೆಗಳನ್ನು ಆರಂಭಿಸಿ. ಮಳೆಗಾಲದೊಳಗಡೆ ಮುಗಿಯಬೇಕಾದ ಕಾಮಗಾರಿಗಳನ್ನು ಪೂರ್ಣಗೊಳಿಸಿ. ಯಾವುದೇ ಕಾರಣಕ್ಕೂ ವಿಳಂಬ ಮಾಡಬೇಡಿ ಎಂದು ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ, ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಕಾವ್ಯಾರಾಣಿ ಕೆ.ವಿ., ತಹಸೀಲ್ದಾರ್ರರು, ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.