ಹೈದರಾಬಾದ್: ‘ಅಣ್ಣಾತ್ತೆ’ ಚಿತ್ರವನ್ನು ಆದಷ್ಟು ಬೇಗ ಮುಗಿಸಬೇಕು ಎಂಬ ರಜನಿಕಾಂತ್ ಅವರ ಯೋಚನೆ ಮತ್ತೊಮ್ಮೆ ತಲೆ ಕೆಳಗಾಗಿದೆ. ಚಿತ್ರತಂಡದವರಲ್ಲಿ ನಾಲ್ವರಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಚಿತ್ರೀಕರಣ ಯಾವಾಗ ಮತ್ತೆ ಶುರುವಾಗುತ್ತದೆ ಎಂಬ ವಿಷಯ ಇನ್ನಷ್ಟೇ ಗೊತ್ತಾಗಬೇಕಿದೆ.
ಇದನ್ನೂ ಓದಿ: ಹೊಸ ಚಿತ್ರದ ಸಿದ್ಧತೆಯಲ್ಲಿ ಕೆ. ಮಂಜು ಮಗ ಶ್ರೇಯಸ್
ರಜನಿಕಾಂತ್ ಅವರು ‘ಅಣ್ಣಾತ್ತೆ’ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಎಲ್ಲಾ ಚೆನ್ನಾಗಿ ನಡೆಯುತ್ತಿರುವಾಗ, ಚಿತ್ರತಂಡದ ನಾಲ್ವರಿಗೆ ಕರೊನಾ ಪಾಸಿಟಿವ್ ಬಂದಿರುವುದರಿಂದ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹೋಗಿದೆ.
ಇಷ್ಟಕ್ಕೂ ರಜನಿಕಾಂತ್ ಅವರಿಗೆ ತುರ್ತಾಗಿ ಚಿತ್ರ ಮುಗಿಸುವುದಕ್ಕೂ ಒಂದು ಕಾರಣವಿದೆ. ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆಗಳು ನಡೆಯಲಿದ್ದು, ಅದರಲ್ಲಿ ರಜನಿಕಾಂತ್ ಅವರ ರಾಜಕೀಯ ಪಕ್ಷ ಸಹ ಸ್ಪರ್ಧಿಸಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಒಪ್ಪಿಕೊಂಡಿರುವ ‘ಅಣ್ಣಾತ್ತೆ’ ಚಿತ್ರದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸುವುದು ಅವರ ಯೋಚನೆ. ಆದರೆ, ಇದೀಗ ಚಿತ್ರ ಮುಗಿಯುವುದು ಇನ್ನಷ್ಟು ತಡವಾಗಲಿದೆ.
ಇದನ್ನೂ ಓದಿ: 2021ರ ಮೊದಲ ಚಿತ್ರವಾಗಿ ‘ರಾಜತಂತ್ರ’
‘ಅಣ್ಣಾತ್ತೆ’ ಚಿತ್ರದಲ್ಲಿ ರಜನಿಕಾಂತ್ ಜೊತೆಗೆ ನಯನತಾರಾ, ಖುಷ್ಬೂ, ಮೀನಾ, ಕೀರ್ತಿ ಸುರೇಶ್ ಮುಂತಾದವರು ನಟಿಸುತ್ತಿದ್ದು, ಶಿವಾ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.