ರಾಮನಗರ: ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಪ್ರಾಂಶುಪಾಲರ ಪತಿ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿಯ ಗುನ್ನೂರಿನ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಈ ಸಂಬಂಧ ಪ್ರಾಂಶುಪಾಲರಾದ ಜಯಲಕ್ಷ್ಮೀ ಅವರ ಪತಿ ಸುರೇಶ್ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ದೂರು ನೀಡಿದ್ದಾರೆ.
ಏನಿದು ಪ್ರಕರಣ?: ಗುನ್ನೂರಿನಲ್ಲಿರುವ ವಸತಿ ಶಾಲೆಗೆ ಪ್ರಾಂಶುಪಾಲರಾದ ಜಯಲಕ್ಷ್ಮೀ ಅವರ ಪತಿ ಸುರೇಶ್ ತೆರಳಿ ಅಲ್ಲಿ ವಿದ್ಯಾರ್ಥಿಗಳ ದೊಣ್ಣೆಯಿಂದ ಹಲ್ಲೆ ಮಾಡಿರುವುದಲ್ಲದೆ, ಅವಾಚ್ಯ ಶಬ್ಧಗಳಿಂದ ನಿಂಧಿಸಿದ್ದಾರೆ.
ವಿದ್ಯಾರ್ಥಿಗಳು ಮಕ್ಕಳ ಸಹಾಯವಾಣಿಗೆ ದೂರು ನೀಡಿದ್ದು, ದೂರನ್ನು ಸಮಾಜ ಕಲ್ಯಾಣ ಇಲಾಖೆ ಗಮನಕ್ಕೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳ ಹೇಳಿಕೆಯನ್ನು ಪಡೆದಾಗ, ಹಾಸ್ಟೆಲ್ಗೆ ಸಂಬಂಧವೇ ಇಲ್ಲ, ಹೊರಗಿನವರಾದ ಸುರೇಶ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿ, ನಿಂದಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಕೂಡಲೇ ಎಚ್ಚತ್ತ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಯೋಗೇಶ್ ವಿದ್ಯಾರ್ಥಿಗಳ ಮೇಲ್ಲೆ ಹಲ್ಲೆ ನಡೆಸಿದ ಸುರೇಶ್ ವಿರುದ್ಧ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಾಂಶುಪಾಲರಾದ ಜಯಲಕ್ಷ್ಮೀ ಅವರನ್ನು ಹಾಸ್ಟೆಲ್ ಕರ್ತವ್ಯದಿಂದ ಬಿಡುಗಡೆಗೊಳಿಸಿದ್ದಾರೆ.