ಮಂಗಳೂರು: ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಸಂಬಂಧಿಸಿ ಜಿಲ್ಲೆಯ ಕಲಾವಿದರ ಜತೆ ಸಮಾಲೋಚನಾ ಸಭೆ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಡಾ.ವೈ.ಭರತ್ ಶೆಟ್ಟಿ, ಕಲಾವಿದರ ಸಲಹೆ, ಸಹಕಾರದೊಂದಿಗೆ ಸುಸಜ್ಜಿತ ರಂಗ ಮಂದಿರ ನಿರ್ಮಾಣವಾಗಲಿದೆ. ಆದಷ್ಟು ಬೇಗ ಕಾಮಗಾರಿ ಆರಂಭವಾಗಲಿದ್ದು, ಈ ಸಂಬಂಧ ಸಂಪೂರ್ಣ ಅಗತ್ಯಗಳನ್ನು ಗಮನದಲ್ಲಿರಿಸಿ ಅಂತಿಮ ಬಜೆಟ್ ತಯಾರಿಸಲು ಸೂಚನೆ ನೀಡಲಾಗುವುದು ಎಂದರು.
ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಲಾವಿದರೊಂದಿಗೆ ನೇರ ಮಾತುಕತೆ ನಡೆಸಿ, ಮಾಹಿತಿ ಸಂಗ್ರಹಿಸಿದರು. ಆರ್ಕಿಟೆಕ್ಟ್ ಕುಮಾರ್ಚಂದ್ರ ಪಿಪಿಟಿ ಮೂಲಕ ಮಾಹಿತಿ ನೀಡಿದರು.
ಕಾರ್ಪೋರೇಟರ್ ಲೋಹಿತ್ ಅಮೀನ್, ಮುಡಾ ಆಯುಕ್ತ ದಿನೇಶ್ ಕುಮಾರ್, ಜಿಲ್ಲಾ ನಗರ ಅಭಿವೃದ್ಧಿ ಕೋಶದ ನಿರ್ದೇಶಕಿ ಗಾಯತ್ರಿ ನಾಯಕ್, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಪ್ರದೀಪ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.