More

    10 ವರ್ಷ ತಲೆಮರೆಸಿದ್ದ ಆರೋಪಿ ಸೆರೆ

    ಮಂಗಳೂರು/ಗುರುಪುರ

    ಬಾಲಕಿಯನ್ನು ಪುಸಲಾಯಿಸಿ ಆಟೋ ರಿಕ್ಷಾದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ 10 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊನೆಗೂ ಬಂಧಿಸುವಲ್ಲಿ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ-ಮೇಲಂತಬೆಟ್ಟು ನಿವಾಸಿ ಮನೋಜ್ ಬಿ. ಶೆಟ್ಟಿ ಬಂಧಿತ. 2011ರ ಜೂ.24ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚೂರು ನೀರುಡೆಯ 7ನೇ ತರಗತಿ ವಿದ್ಯಾರ್ಥಿನಿ ಶಾಲೆಗೆ ತೆರಳುತ್ತಿದ್ದಾಗ ಆರೋಪಿ ಮನೋಜ್ ಶೆಟ್ಟಿ ಮತ್ತು ಆತನ ಸ್ನೇಹಿತ ದಿನೇಶ್ ಅಮೀನ್ ಎಂಬುವರು ಮನೆಗೆ ಕರೆದೊಯ್ದು ಅತ್ಯಾಚಾರಗೈದಿದ್ದರು. ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಬಾಲಕಿಯ ತಾಯಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಪ್ರಕರಣದ ತನಿಖೆ ನಡೆಸಿದ ಮಂಗಳೂರು ಉತ್ತರ ಉಪ ವಿಭಾಗದ ಈ ಹಿಂದಿನ ಎಸಿಪಿ ಪುಟ್ಟಮಾದಯ್ಯ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನಂತರ ಹೈಕೋರ್ಟ್‌ನಲ್ಲಿ ಜಾಮೀನು ಪಡೆದ ಆರೋಪಿ ಮನೋಜ್ ಬಿ. ಶೆಟ್ಟಿ ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇತ್ತ, ವಿಚಾರಣೆ ನಡೆಸಿದ ನ್ಯಾಯಾಲಯ 2ನೇ ಆರೋಪಿ ದಿನೇಶ್ ಅಮೀನ್‌ಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿತ್ತು.

    ಹೆಸರು ಬದಲಿಸಿ ವಾಸ: ತಲೆಮರೆಸಿಕೊಂಡಿದ್ದ ಮನೋಜ್ ಶೆಟ್ಟಿ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು. ಈತ ಸುಮಾರು 10 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಕನ್ನಡಿಕಟ್ಟೆ ಮತ್ತು ಮೇಲಂತಬೆಟ್ಟು ಎಂಬಲ್ಲಿ ಹೆಸರನ್ನು ಮೋಹನ್ ಎಂಬುದಾಗಿ ಬದಲಾಯಿಸಿಕೊಂಡು ವಾಸಿಸುತ್ತಿದ್ದ. ಆರೋಪಿ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ಬಜ್ಪೆ ಪೊಲೀಸರು ಆರೋಪಿಯನ್ನು ಮಂಗಳವಾರ ಬಂಧಿಸಿದ್ದಾರೆ. ಬಜ್ಪೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ನಡೆದ ಪತ್ತೆ ಕಾರ್ಯದಲ್ಲಿ ಪಿಎಸ್‌ಐ ಪೂವಪ್ಪ ಹಾಗೂ ಅಪರಾಧ ಪತ್ತೆ ವಿಭಾಗದ ಎಎಸ್‌ಐ ರಾಮ ಪೂಜಾರಿ, ಸಿಬ್ಬಂದಿ ರಶೀದ್ ಶೇಖ್, ಸಿದ್ದಲಿಂಗಯ್ಯ ಹಿರೇಮಠ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts